ಸುಸೂತ್ರವಾಗಿ ಜರುಗಿದ ನೀಟ್ ಮರು ಪರೀಕ್ಷೆ

KannadaprabhaNewsNetwork |  
Published : Jun 22, 2026, 02:15 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ಹಾವೇರಿ ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಬಹುತೇಕ ಸುಗಮವಾಗಿ ನಡೆಯಿತು.

ಹಾವೇರಿ: ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಬಹುತೇಕ ಸುಗಮವಾಗಿ ನಡೆಯಿತು.

ನಗರದ ಹೊರವಲಯದಲ್ಲಿರುವ ಗಾಂಧಿಪುರ ಸರ್ಕಾರಿ ಪದವಿ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪಪೂ ಕಾಲೇಜು, ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಇಜಾರಿ ಲಕಮಾಪುರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜು, ಸರ್ಕಾರಿ ಬಾಲಕರ ಪಿಯು ಕಾಲೇಜನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿತ್ತು. ಪರೀಕ್ಷೆಯು ರಾಷ್ಟ್ರೀಯ ಮಟ್ಟದ ಮಹತ್ವದ ಪರೀಕ್ಷೆಯಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಜಿಲ್ಲಾಡಳಿತ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಂಡಿತ್ತು. ಸುಸಜ್ಜಿತ ಪರೀಕ್ಷಾ ಕೊಠಡಿಗಳು, ಅಭ್ಯರ್ಥಿಗಳ ಆಸನ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳ ಪರಿಶೀಲನೆ, ಪ್ರವೇಶ ದ್ವಾರಗಳ ನಿರ್ವಹಣೆ ಹಾಗೂ ಭದ್ರತಾ ಕ್ರಮಗಳನ್ನು ನಿಯೋಜಿಸಲಾಗಿತ್ತು. ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಬಹುತೇಕ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಉಪಸ್ಥಿತರಿದ್ದು, ಎಲ್ಲ ಹಂತದ ತಪಾಸಣೆಗೆ ಒಳಗಾಗಿ ಕೊಠಡಿಯಲ್ಲಿ ಆಸೀನರಾಗಿದ್ದರು. ಒಟ್ಟಿನಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೀಟ್ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

409 ಅಭ್ಯರ್ಥಿಗಳು ಗೈರು: ನಗರದಲ್ಲಿ ನೀಟ್ ಪರೀಕ್ಷೆಗೆ ನಿಯೋಜಿಸಿದ ಐದು ಪರೀಕ್ಷಾ ಕೇಂದ್ರಗಳಲ್ಲಿ 2,532 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಈ ಪೈಕಿ 2,123 ಅಭ್ಯರ್ಥಿಗಳು ಹಾಜರಾಗಿದ್ದು, 409 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತ ಜಗತ್ತಿಗೆ ಯೋಗ ಗುರು: ಅಭಿನವ ಕರಿಬಸವ ಶ್ರೀಗಳು
ನಿಯಮಿತ ಯೋಗಾಭ್ಯಾಸದಿಂದ ಆರೋಗ್ಯಕರ ಜೀವನ