ಕನ್ನಡಪ್ರಭ ವಾರ್ತೆ ಪಾಂಡವಪುರ
ಆರತಿ ಉಕ್ಕಡ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿದ ಜೆಡಿಎಸ್ ಮುಖಂಡ ಗವಿಗೌಡ ಪ್ರವೀಣ್ ಅವರು, ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗಾಗಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮರಿ ಹರಕೆ ಹೊತ್ತುಕೊಂಡರು. ಈ ವೇಳೆ ಮೇಕೆಗೆ ದೇವಿ ತೀರ್ಥ ಹಾಕುತ್ತಿದ್ದಂತೆಯೇ ತಲೆ ಬಾಗುವ ಮೂಲಕ ಗೆಲುವಿನ ಸಂದೇಶ ನೀಡಿತು.
ಗವಿಗೌಡ ಪ್ರವೀಣ್ ಮಾತನಾಡಿ, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿ ಎಂದು ಹಾರೈಸಿ ಶಕ್ತಿ ದೇವಿ ಆರತಿ ಉಕ್ಕಡದ ಮಾರಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮೇಕೆ ಹರಕೆ ಹೊತ್ತುಕೊಂಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಿದರೆ ದೇವಿಗೆ ಮೇಕೆ ಬಲಿ ನೀಡಿ ಸಾರ್ವಜನಿಕರಿಗೆ ಊಟ ಹಾಕಲಾಗುವುದು ಎಂದರು.ದೇಶದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸುಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಳೆದ ಎರಡು ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಲ್ಲಿನ ಜನತೆ ಕೈಹಿಡಿಯಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.
ಚುನಾವಣೆಯಲ್ಲಿ ನಿಖಿಲ್ ಜಯಗಳಿಸಿದರೆ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ಅಲಂಕರಿಸಲಿದ್ದಾರೆ. ಅವರು ರಾಜ್ಯಾದ್ಯಾಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಡೆಸಿ ಅಧಿಕಾರಕ್ಕೆ ತರಲಿದ್ದಾರೆ. ಅದೇರೀತಿ ಕ್ಷೇತ್ರದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಗೆ ಉನ್ನತ ಹುದ್ದೆ ದೊರೆಯಲಿ ಎಂದು ಶುಭ ಹಾರೈಸಿದರು.