ಬಿ.ಶೇಖರ್ ಗೋಪಿನಾಥಂ
750 ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಆನೆಯ ಮೇಲೆ ಸೊಗಸಾಗಿ ಕಟ್ಟುವುದೇ ಒಂದು ಕಲೆಗಾರಿಕೆ. ಅರಣ್ಯ ಇಲಾಖೆಯ ಸಿಬ್ಬಂದಿ ಪ್ರತಿ ವರ್ಷ ಅಂಬಾರಿ ಕಟ್ಟುವ ಕೈಂಕರ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ, ಸೊಗಸಾಗಿ ಅಂಬಾರಿ ಕಟ್ಟುತ್ತಾರೆ.
ದಸರಾ ಜಂಬೂಸವಾರಿ ಆರಂಭವಾಗುವ ವೇಳೆಗೆ ಮೈಸೂರು ಅರಮನೆಯ ಆನೆ ಬಿಡಾರದಲ್ಲಿ ಅಭಿಮನ್ಯು ಆನೆ ಮೈಮೇಲೆ ಗಾದಿ, ಚಾಪ್ ಹಾಕಿ ಹಗ್ಗದಿಂದ ಬೀಗಿಯಾಗಿ ಕಟ್ಟಲಾಯಿತು. ನಂತರ ರಂಗು ರಂಗಿನ ಜುಲಾ ಹೊದಿಸಲಾಯಿತು. ಬಳಿಕ ಮೆರವಣಿಗೆ ಆರಂಭವಾದ ಮೇಲೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳೊಂದಿಗೆ ಅಭಿಮನ್ಯು ಆನೆಯು ಆನೆ ಬಿಡಾರದಿಂದ ಖಾಸ್ ಅರಮನೆ ಬಳಿಗೆ ಆಗಮಿಸಿತು.ಒಂದು ಕಡೆ ದಸರಾ ಮೆರವಣಿಗೆಯು ಜಾನಪದ ಕಲಾತಂಡಗಳು, ಸ್ತಬ್ಧಚಿತ್ರಗಳೊಂದಿಗೆ ಸಾಗುತ್ತಿದ್ದರೇ, ಮತ್ತೊಂಡೆದೆ ಅಭಿಮನ್ಯು ಆನೆ ಮೇಲೆ ಅಂಬಾರಿ ಕಟ್ಟುವ ಕಾರ್ಯವೂ ಸಂಪ್ರದಾಯದಂತೆ ಆರಂಭವಾಯಿತು. ಚಿನ್ನದ ಅಂಬಾರಿಯನ್ನು ಅರಮನೆಯವರು ಅರಣ್ಯ ಇಲಾಖೆಯವರಿಗೆ ನೀಡುತ್ತಿದ್ದಂತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಚಿನ್ನದ ಅಂಬಾರಿಯೊಳಗೆ ಇರಿಸ ಸಿದ್ಧಗೊಳಿಸಲಾಯಿತು. ಚಿನ್ನದ ಅಂಬಾರಿಯನ್ನು ಕ್ರೇನ್ ಸಹಾಯದಿಂದ ಅಭಿಮನ್ಯು ಆನೆಯ ಮೈಮೇಲೆ ಇರಿಸಿ ಬಿಗಿಯಾಗಿ, ಭದ್ರವಾಗಿ ಕಟ್ಟಲಾಯಿತು.
ಖಾಸ್ ಅರಮನೆ ಬಳಿ ಅಂಬಾರಿ ಹೊತ್ತ ಅಭಿಮನ್ಯು ಜೊತೆಗೆ ಕುಮ್ಕಿ ಆನೆಗಳಾದ ಲಕ್ಷ್ಮಿ ಮತ್ತು ಹಿರಣ್ಯಾ ಬಂದು ನಿಂತವು. ಅಂಬಾರಿ ಆನೆಯನ್ನು ಅಶ್ವರೋಹಿದಳ, ಕೆಎಸ್ಆರ್ ಪಿ, ಸಿಎಆರ್, ಡಿಎಆರ್, ಆರ್ ಪಿಎಫ್ ಸಮ್ಮುಖದಲ್ಲಿ ಪೊಲೀಸ್ ಬ್ಯಾಂಡ್ ವಾದ್ಯ ಮೇಳದೊಂದಿಗೆ ಖಾಸ್ ಅರಮನೆಯಿಂದ ಕರೆ ತರಲಾಯಿತು. ಅಂಬಾರಿ ಆನೆಯು ಜಯಮಾರ್ತಾಂಡ ದ್ವಾರದ ಬಳಿಯಿಂದ ಬಳಸಿಕೊಂಡು ಮೈಸೂರು ಅರಮನೆ ಮುಂಭಾಗಕ್ಕೆ ಆಗಮಿಸಿತು.