ಲಕ್ಷ್ಮೇಶ್ವರ: ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು 9 ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲು ಹೊರಟಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಇಲ್ಲಿಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಹಾಗೂ ಅಂಗಡಿ ಮುಂಗಟ್ಟುಗಳಿಂದ ಚಂದಾ ಎತ್ತಿ ಸರ್ಕಾರಕ್ಕೆ ಕಳಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯ ಸರ್ಕಾರ ಇಂತಹ ನಿರ್ಧಾರದಿಂದ ಹಿಂದೆ ಸರಿದು ವಿದ್ಯಾರ್ಥಿಗಳ ಹಿತ ಕಾಯುವ ಕಾರ್ಯ ಮಾಡಬೇಕು. ರಾಜ್ಯ ಸರ್ಕಾರ ಬೇಕಾಬಿಟ್ಟಿ ಬಿಟ್ಟಿ ಭಾಗ್ಯಗಳನ್ನು ಕೊಡುವ ಮೂಲಕ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದೆ. ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕಾರ್ಯ ನಿಲ್ಲಿಸಿ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನಹರಿಸಬೇಕು ಎಂದು ಹೇಳಿದರು.
ಈ ವೇಳೆ ತಾಲೂಕು ಸಂಚಾಲಕ ಪ್ರಕಾಶ ಕುಂಬಾರ, ಸಹ ಸಂಚಾಲಕ ವಿನಯ ಸಪಡ್ಲ, ಸಹ ಕಾರ್ಯದರ್ಶಿ ಯಶವಂತ ಶಿರಹಟ್ಟಿ, ಮನೋಜ ತಂಡಿಗೇರ, ವಿನಯ ಕುಂಬಾರ. ಅಭಿಷೇಕ ಈಶನಗೌಡರ, ಅರವಿಂದ ಇಚ್ಚಂಗಿ, ವಿನಾಯಕ ಹುಂಬಿ, ಯುವರಾಜ ದುರ್ಗದ, ಈರಣ್ಣ ಕುಂಬಾರ ಇತರು ಇದ್ದರು.