ಮಡಿಕೇರಿ: ರಾಜ್ಯ ಸರ್ಕಾರ ಕೊಡಗು ವಿವಿಯನ್ನು ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ವಿದ್ಯಾರ್ಥಿಗಳು ಸೇರಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಬಿ.ಸಿ.ಮಂದಾರ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ತಜ್ಞರ ಸಲಹೆಯನ್ನು ಪಡೆಯದೆ ರಾಜ್ಯ ಸರಕಾರ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕೊಡಗು ವಿಶ್ವವಿದ್ಯಾಲಯದಡಿಯಲ್ಲಿ ಸುಮಾರು 25 ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 10 ಸಾವಿರ
ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿಯೇ ವಿವಿ ಇದ್ದಾಗ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಚ್ಚಿನಆದ್ಯತೆ ದೊರೆಯುತ್ತದೆ. ಬೇರೆ ರಾಜ್ಯಕ್ಕೆ ತೆರಳುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ವಿವಿಯನ್ನು ಮುಚ್ಚುವ ನಿರ್ಧಾರವನ್ನು ಸರಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಹಿಂದಿನ ಸರ್ಕಾರ ವಿಶ್ವವಿದ್ಯಾಲಯಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದೆ. ಇದನ್ನು ಅಭಿವೃದ್ಧಿ ಪಡಿಸುವ ಚಿಂತನೆಯನ್ನು ಈಗಿನ ಸರಕಾರ ಮಾಡಬೇಕು. ರಾಜ್ಯ ಸರ್ಕಾರ ಭಾಗ್ಯಗಳ ಪೂರೈಕೆಗೆ ಹಣ ಖರ್ಚು ಮಾಡುವ ಜೊತೆಯಲ್ಲಿ ವಿವಿಗಳ ಅಭಿವೃದ್ಧಿಗೂ ನೀಡಲಿ ಎಂದು ಒತ್ತಾಯಿಸಿದರು. ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಎಫ್ಕೆಸಿಸಿಐ ಸಭಾಂಗಣದಲ್ಲಿ ರಾಜ್ಯದ ಮಾಜಿ ಉನ್ನತ ಶಿಕ್ಷಣ ಸಚಿವರು, ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ತಜ್ಞರು, ವಿಶ್ರಾಂತ ಉಪಕುಲಪತಿಗಳು, ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರು, ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿ ಮುಖಂಡರು ಸಮ್ಮುಖದಲ್ಲಿ ದುಂಡು ಮೇಜಿನ ಸಭೆಯನ್ನು ನಡೆಸಲಾಗಿದೆ. ಜಿಲ್ಲೆಯ ವಿಶ್ವವಿದ್ಯಾಲಯ ಮುಚ್ಚುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣದ ಕನಸು ನುಚ್ಚುನೂರಾಗುತ್ತದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.ಕೇವಲ ಆರ್ಥಿಕ ಸಂಪನ್ಮೂಲ ಒದಗಿಸಲು ಸಾಧ್ಯವಾಗುವುದಿಲ್ಲ ಎನ್ನುವ ಆಧಾರದ ಮೇಲೆ ವಿವಿ ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ವಿವಿಗಳಿಗೆ ಕಾಯಕಲ್ಪ ನೀಡಲು ಈ ಸಾಲಿನ ವಾರ್ಷಿಕ ಬಜೆಟ್ನಲ್ಲಿಯೇ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಆಂದೋಲನ, ಪತ್ರ ಚಳುವಳಿ ಹಾಗೂ ವ್ಯಾಪಕ ಜನ ಜಾಗೃತಿಯನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಮಾಡಲಾಗುವುದು. ಅಲ್ಲದೇ 9 ವಿವಿಗಳಿಗೂ ಪ್ರತ್ಯೇಕ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಉಳಿಸಿ ಕ್ರಿಯಾ ಸಮಿತಿ ರಚಿಸಿ ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳುವ ಕಾರ್ಯಕ್ರಮಗಳನ್ನ ರೂಪಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿ.ಸಿ.ಮಂದಾರ ತಿಳಿಸಿದರು.ಪರಿಷತ್ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಹೆಚ್.ಕೌಶಲ್ಯ, ಟಿ.ಡಿ.ಗಂಧರ್ವ, ವಿದ್ಯಾರ್ಥಿ ಪ್ರಮುಖ್ ಪ್ರಮೋದ್ ಪಲ್ಲೇದ್, ಜಿಲ್ಲಾ ಸಂಚಾಲಕ ಪಿ.ಎಸ್.ರೋಹಿತ್ ಹಾಗೂ ಮಡಿಕೇರಿ ತಾಲೂಕು ಸಂಚಾಲಕ ಸಂತೋಷ್ ಸುದ್ದಿಗೋಷ್ಠಿಯಲ್ಲಿದ್ದರು.