ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಯುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ನಡೆಸುತ್ತಿದ್ದರಿಂದ ಡೀಸಿ ಕಚೇರಿ ಆವರಣಕ್ಕೆ ಮೆರವಣಿಗೆ ಮೂಲಕ ಒಳ ಹೋಗುವ ವೇಳೆ ಪೊಲೀಸರು ಮುಖ್ಯದ್ವಾರದಲ್ಲೆ ತಡೆದು ಅಪರ ಜಿಲ್ಲಾಧಿಕಾರಿ ಶಾಂತಲಾ ಅವರು ಮನವಿ ಸ್ವೀಕರಿಸಿದರು.ಇದೆ ವೇಳೆ ಪ್ರತಿಭಟನಾಕಾರರು ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ, ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ, ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದ ಮಧ್ಯೆ ಮೂಡುತ್ತಿದೆ ಎಂದರು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನವನ್ನು ನೀಡವುದು, ಈ ವಿಷಯದಲ್ಲಿ ಸರ್ಕಾರ ತಕ್ಷಣವೇ ಪರಿಹಾರವನ್ನು ನೀಡಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು. * ಪ್ರಮುಖ ಬೇಡಿಕೆಗಳು: 1.ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು
2.ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ಸಂಬಳ ನೀಡಬೇಕು3. ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.
ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಹಾಗೂ ರಾಜ್ಯ ಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕೆಂದು ಆಗ್ರಹಿಸಿದರು.ಅತಿಥಿ ಉಪನ್ಯಾಸಕರ ಪರವಾಗಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆಗೆಂದು ವಿದ್ಯಾರ್ಥಿಗಳನ್ನು ಡೀಸಿ ಕಚೇರಿ ಆವರಣಕ್ಕೆ ಬಿಡದೆ ನಿರ್ಬಂಧ ಹೇರಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ಬಂದ ಹಿನ್ನೆಲೆಯಲ್ಲಿ ಎನ್.ಆರ್. ವೃತ್ತದವರೆಗೂ ರಸ್ತೆ ಉದ್ದಲಕ್ಕೂ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಯಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಶ್ರೀನಿವಾಸ್, ನಗರ ಕಾರ್ಯದರ್ಶಿ ವೇಣುಕುಮಾರ್, ವಿದ್ಯಾರ್ಥಿಗಳಾದ ಸುಶ್ಮಿತಾ, ಚಿರಂತ್ ಹಾಗೂ ಅತಿಥಿ ಉಪನ್ಯಾಸಕರಾದ ಸುನೀತಾ, ಸುರೇಶ್, ಮಹಮ್ಮದ್ ಆರೀಫ್ ಕಾರ್ಲೇ, ಅರಸೀಹಳ್ಳಿ ಮಂಜುನಾಥ್, ದರಣೇಂದ್ರ, ಚೇತನ್, ಕುಮಾರ್, ಮಂಜೇಗೌಡ, ಇತರರು ಉಪಸ್ಥಿತರಿದ್ದರು.