ಹಾವೇರಿ: ಹಾಸ್ಟೆಲ್ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ಕಳೆದ ವರ್ಷದ ವಿದ್ಯಾರ್ಥಿ ವೇತನವನ್ನು ಸರಿಯಾಗಿ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.ವಿದ್ಯಾರ್ಥಿಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಿಕೊಂಡು ಎಂದು ಮನವಿ ಮಾಡಿದರು. ಜಿಲ್ಲಾ ಸಂಚಾಲಕ ಅಭಿಷೇಕ್ ದೊಡ್ಡಮನಿ ಸರ್ಕಾರದ ಸುಳ್ಳು ಭರವಸೆಗಳನ್ನು ನೆರವೇರಿಸುವುದಕ್ಕಾಗಿ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟಿರುವ ಹಣವನ್ನು ತಮ್ಮ ಯೋಜನೆಗಳಿಗಾಗಿ ಉಪಯೋಗಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.ಈ ಕೂಡಲೇ ವಿದ್ಯಾರ್ಥಿ ವೇತನವನ್ನು ನೀಡುವಂತೆ ಮತ್ತು ಸಮರ್ಪಕವಾಗಿ ಹಾಸ್ಟೆಲ್ ವ್ಯವಸ್ಥೆಯನ್ನು ಹಾವೇರಿ ಜಿಲ್ಲೆಗೆ ಮಾಡಿಕೊಡಬೇಕೆಂದು ಒತ್ತಾಯಿಸಿದರು. ನಗರ ಕಾರ್ಯದರ್ಶಿ ನಾಗರಾಜ್ ಪುರವಂತಿಗೌಡ್ರು ಮಾತನಾಡಿದರು.
ಈಗಾಗಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಹಾಸ್ಟೆಲ್ಗಳ ಆಯ್ಕೆ ಪ್ರಕ್ರಿಯೆ ವಿಳಂಬದಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸಕಾಲದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಮಾಡದ ಕಾರಣ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಸರ್ಕಾರ ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಎಬಿವಿಪಿ ನಗರ ಕಾರ್ಯದರ್ಶಿ ಪವನಕುಮಾರ ಇಟಗಿ, ಅಭಿಲಾಷ ಬದಾಮಿ, ಅಕ್ಷತಾ ರಣಸೋತ, ಸುಮಾ ಕುಂಬಾರ, ಯಲ್ಲಮ್ಮ ಆರ್.ಎಂ., ಸವಿತಾ ಜಿ., ಸೃಷ್ಟಿ ನಾಯಕ, ಗೀತಮ್ಮ ಲಮಾಣಿ, ಪಲ್ಲವಿ ಕಲ್ಲಜ್ಜನವರ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.