ಕೊಪ್ಪಳ: ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಭಾವನೆ ಬೆಳೆಸುವ ಕೆಲಸ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 78 ವರ್ಷಗಳಿಂದ ದೇಶಾದ್ಯಂತ ನಿರಂತರವಾಗಿ ಮಾಡುತ್ತಿದ್ದು, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಸಾಧ್ಯ ಎಂಬ ಆಶಯದೊಂದಿಗೆ ಸಂಘಟನೆ ಕಾರ್ಯ ನಿರ್ವಹಿಸುತ್ತಿದೆ ಎಂದು ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಹೇಳಿದರು.
ರಾಷ್ಟ್ರ ನಿರ್ಮಾಣ ಎಂದರೆ ಕೇವಲ ಭೌತಿಕ ಅಭಿವೃದ್ಧಿಯಲ್ಲ. ಪ್ರತಿಯೊಬ್ಬ ನಾಗರಿಕನಲ್ಲೂ ದೇಶದ ಪರಂಪರೆ, ಸಂಸ್ಕೃತಿ, ಸಂಸ್ಕಾರ ಹಾಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವು ಮೂಡಿಸಿ ರಾಷ್ಟ್ರೀಯ ಪ್ರಜ್ಞೆ ಬಲಪಡಿಸುವುದೇ ನಿಜವಾದ ರಾಷ್ಟ್ರ ನಿರ್ಮಾಣವಾಗಿದೆ. ಜಾತಿ,ಮತ, ಭಾಷೆಯ ಭೇದವಿಲ್ಲದೆ ಎಲ್ಲರೂ ಒಂದಾಗಿ ಬದುಕುವ ವಾತಾವರಣ ಕಾಲೇಜು ಕ್ಯಾಂಪಸ್ಗಳಲ್ಲಿ ನಿರ್ಮಿಸಲು ಎಬಿವಿಪಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಸುಮಂಗಲ ಮಾತನಾಡಿ, ವಿದ್ಯಾರ್ಥಿಗಳ ಬಸ್ ಪಾಸ್ ಸಮಸ್ಯೆ, ಬಸ್ಗಳ ಕೊರತೆ, ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ವಿಶ್ವವಿದ್ಯಾಲಯಗಳಿಗೆ ಸಮರ್ಪಕ ಅನುದಾನ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ಎಬಿವಿಪಿ ಹಲವು ಯಶಸ್ವಿ ಹೋರಾಟ ನಡೆಸಿದೆ ಎಂದು ಹೇಳಿದರು.ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಕ್ರೀನ್ ಟೈಮ್ ಹೆಚ್ಚಾಗುತ್ತಿರುವುದು, ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸವಾಲಾಗಿದೆ. ಈ ಹಿನ್ನೆಲೆ ದೇಶಾದ್ಯಂತ ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳನ್ನು ಆಟೋಟ, ಕಲೆ, ಅಧ್ಯಯನ, ಸಂವಾದ, ಸೇವಾ ಚಟುವಟಿಕೆ, ನಾವೀನ್ಯತೆ ಹಾಗೂ ಭಾರತೀಯ ಸಂಸ್ಕೃತಿಯತ್ತ ಆಕರ್ಷಿಸುವ ಜಾಗೃತಿ ಕಾರ್ಯಕ್ರಮ ಎಬಿವಿಪಿ ನಡೆಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಬಿವಿಪಿ ಪದಾಧಿಕಾರಿ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.