ಮಂಗಳೂರು: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.ರವಿ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ತಿರುಪತಿ ಯಾತ್ರೆ ಮುಗಿಸಿಕೊಂಡು ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಮಂತ್ರಾಲಯ ತಲುಪಲು ಕೇವಲ 1ರಿಂದ 2 ಕಿ.ಮೀ. ಅಂತರವಿದ್ದಾಗ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರವಿಶೆಟ್ಟಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಪ್ರಯಾಣಿಕರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಮತ್ತು ಸಿಎ ಸುದೇಶ್ ರೈ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.