ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಚಂದ್ರಶೇಖರ ಹಾಗೂ ಗೌರವಾನ್ವಿತ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶಶಿಧರ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಡಾ.ಮೋಹನ್ ರಾವ್ ನಲ್ವಡೆ ಹಾಗೂ ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆನಂದ್ ಅವರು ಆಸ್ಪತ್ರೆಗೆ ಅನಿರೀಕ್ಷಿತ ದಿಢೀರ್ ಭೇಟಿ ನೀಡಿ ಪರಿಶೀಲಿಸಿದಾಗ ಆರೋಪಿಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ, ಜೊತೆಗೆ ಒರ್ವ ಮಹಿಳೆ ಇರುವುದು ಕಂಡು ಈ ಬಗ್ಗೆ ಆಸ್ಪತ್ರೆ ಅಧೀಕ್ಷಕ ಶಿವಕುಮಾರ್ ಅವರನ್ನು ವಿಚಾರಿಸಿದ್ದಾರೆ.
ಈ ವೇಳೆ ಮಹಮದ್ ಹುಸೇನ್ ಒತ್ತಾಯ ಪೂರ್ವಕವಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳು ಇಲ್ಲ ಎಂದು ತಿಳಿಸಿದ್ದಾರೆ. ಸ್ಥಳದಲ್ಲೇ ಹಾಜರಿದ್ದ ಜೈಲು ಸೂಪರಿಡೆಂಟ್ ಅವರನ್ನು ವಿಚಾರಿಸಿದಾಗ ಜೈಲಿನ ವೈದ್ಯಾಧಿಕಾರಿ ಸಲಹೆ ಮೇರೆಗೆ ಆರೋಪಿ ಮಹಮ್ಮದ್ ಹುಸೇನ್ ರನ್ನು ಮಿಮ್ಸ್ ಆಸ್ಪತ್ರೆಗೆ ದಾಖಸಲಾಗಿದೆ. ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸದಿರುವುದು ಗೊತ್ತಾಗಿದೆ.ನ್ಯಾಯಾಲಯದ ಅನುಮತಿ ಪಡೆಯದೆ ಅನಧಿಕೃತವಾಗಿ ಆರೋಪಿಯನ್ನು ಕಳೆದ ಆ.21 ರಿಂದ ಇಲ್ಲಿಯವರೆಗೂ ದಾಖಲಿಸಿರುವುದು ಸ್ಪಷ್ಟ ಕಾನೂನಿನ ಉಲ್ಲಂಘನೆ ಆಗಿದೆ. ಅಲ್ಲದೆ ಆರೋಪಿ ಕೋಣೆಯಲ್ಲಿ ಒಬ್ಬ ಮಹಿಳೆ ಇದ್ದು, ಮೇಲ್ನೋಟಕ್ಕೆ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ವರದಿ ನೀಡುವಂತೆ ಜೈಲು ಸೂಪರಿಡೆಂಟ್, ಪೋಲೀಸ್ ಅಧಿಕಾರಿ ಹಾಗೂ ಮಿಮ್ಸ್ ಆಸ್ಪತ್ರೆ ಅಧೀಕ್ಷಕರಿಗೆ ಸ್ಥಳದಲ್ಲೇ ನಿರ್ದೇಶನ ನೀಡಿತು.
ಈ ಆರೋಪಿಯು ಕಳೆದ ಜುಲೈ 2 ರಂದು ಶ್ರೀರಂಗಪಟ್ಟಣ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸರ್ಕಾರಿ ನೌಕರನ ಸೋಗಿನಲ್ಲಿ ಅಕ್ರಮ ಪ್ರವೇಶ ಮಾಡಿ ಅನಧಿಕೃತವಾಗಿ ಸರ್ಕಾರಿ ತಂತ್ರಾಂಶದಲ್ಲಿ ಆಕಾರ್ ಬಂದ್ ದಾಖಲೆಯನ್ನು ಡಿಜಿಟಲೀಕರಣ ಮಾಡಿರುವ ಮತ್ತು ರೆವಿನ್ಯೂ/ಸರ್ವೆ ಇಲಾಖೆ ವ್ಯವಹಾರ ಸಂಬಂಧ ಸರ್ಕಾರಿ ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿರುವ ಆರೋಪವಿತ್ತು.