ಚುನಾವಣೆ ಆಯೋಗದ ನಿರ್ದೇಶಾನುಸಾರ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ

KannadaprabhaNewsNetwork | Updated : Apr 28 2024, 01:20 AM IST

ಚುನಾವಣೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶಾನುಸಾರ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಚುನಾವಣೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶಾನುಸಾರ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಸೂಚನೆ ನೀಡಿದರು.

ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾವಾರು ಏ.28 ರಿಂದ 29ವರೆಗೆ ಇವಿಎಂ ಹಾಗೂ ವಿವಿಪ್ಯಾಟ್ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಧ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು.

ಚುನಾವಣೆ ಆಯೋಗದ ಮಾರ್ಗಸೂಚಿಗಳನ್ವಯ ಮತಯಂತ್ರದ ಕಮಿಷನಿಂಗ್‌ ಕಾರ್ಯದ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆಯೂ ಈ ಪ್ರಕ್ರಿಯೆ ಮುಗಿಯುವರೆಗೂ ಹಾಜರಿದ್ದು, ಮೇಲ್ವಿಚಾರಣೆ ವಹಿಸಬೇಕೆಂದು ಸೂಚಿಸಿದರು.

ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಇಲ್ಲಿ ಎರಡು ಬ್ಯಾಲೆಟ್ ಯುನಿಟ್ ಬಳಸಲಾಗುತ್ತಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಮಾಸ್ಟರ್ ಟ್ರೈನರ್‌ಗಳು ಜವಾಬ್ದಾರಿಯಿಂದ ಚುನಾವಣೆ ಆಯೋಗ ನೀಡಿರುವ ಹಾಗೂ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿ ಬಗ್ಗೆ ತಿಳಿದುಕೊಂಡು ಕಾರ್ಯ ನಿರ್ವಹಿಸಬೇಕು ಎಂದರು.

ಚುನಾವಣೆ ಕರ್ತವ್ಯ ಹಾಗೂ ಇವಿಎಂ ಹಾಗೂ ವಿವಿಪ್ಯಾಟ್ ಳ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಮನನ ಮಾಡಿಕೊಳ್ಳಬೇಕು. ಏನಾದರೂ ಸಮಸ್ಯೆಗಳಿದ್ದರೆ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಚುನಾವಣೆ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಮತದಾನದ ದಿವಸ ಸಂಭವನೀಯ ಸವಾಲುಗಳು ಹಾಗೂ ಮತಯಂತ್ರ ಬಳಕೆ ಕುರಿತು ತರಬೇತಿ ಮೂಲಕ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ರಮೇಶ ಕಳಸದ. ಜಿಲ್ಲಾ ಚುನಾವಣೆ ಶಾಖೆಯ ತಹಸೀಲ್ದಾರ್‌ , ಪಂಪಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮೇಲ್ವಿಚಾರಕರು ಉಪಸ್ಥಿತರಿದ್ದರು