ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ

KannadaprabhaNewsNetwork |  
Published : Apr 22, 2024, 02:01 AM ISTUpdated : Apr 22, 2024, 02:02 AM IST
21ಕೆಪಿಎಲ್21ಲೋಕಸಭೆ ಚುನಾವಣೆ-2024ರ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆ | Kannada Prabha

ಸಾರಾಂಶ

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು.

ಲೋಕಸಭೆ ಚುನಾವಣೆ: ಸಾಮಾನ್ಯ ವೀಕ್ಷಕರಿಂದ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕಿ ಹೇಮ ಪುಷ್ಪ ಶರ್ಮಾ(ಐ.ಎ.ಎಸ್) ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಜಿಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ರ್‍ಯಾಂಪ್ ಸೇರಿದಂತೆ ಇತರ ಅಗತ್ಯ ಸೌಲಭ್ಯ ಒದಗಿಸಬೇಕು. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಗಮನ ಹರಿಸಬೇಕು. ಇಂದು ನಾನು 16 ಮತಗಟ್ಟೆಗಳಿಗೆ ಭೇಟಿ ನೀಡಿದ್ದು, ಅಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿರುವುದು ಸಂತಸ ತಂದಿದೆ ಎಂದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದ ಸಾಮಾನ್ಯ ವೀಕ್ಷಕರು, ನಿಯಮಿತವಾಗಿ ಅರಿವು ಕಾರ್ಯಕ್ರಮಗಳನ್ನು ಕೈಗೊಂಡು ಮತದಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ 7 ತಾಲೂಕುಗಳು, 21 ಹೋಬಳಿ, 595 ಜನವಸತಿ ಗ್ರಾಮಗಳು, 9 ನಗರ ಸ್ಥಳೀಯ ಸಂಸ್ಥೆಗಳು, 153 ಗ್ರಾಪಂ, 5 ವಿಧಾನಸಭಾ ಕ್ಷೇತ್ರಗಳು, 1 ಜಿಪಂ ಹಾಗೂ 7 ತಾಲೂಕು ಪಂಚಾಯಿತಿಗಳಿದ್ದು, 1,317 ಮತಗಟ್ಟೆಗಳಿವೆ. ಇದರ ಜೊತೆಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತದೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2,045 ಮತಗಟ್ಟೆಗಳಿವೆ ಎಂದು ಅವರು ತಿಳಿಸಿದರು.

ಎಂಟು ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಬ್ಬರಂತೆ ಮತ್ತು ಅಪರ ಜಿಲ್ಲಾಧಿಕಾರಿಗಳು ಸೇರಿ ಒಟ್ಟು 9 ಜನರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಜಿಲ್ಲಾಡಳಿತ ಭವನದಲ್ಲಿ ಕಂಟ್ರೋಲ್ ರೂಮ್ ಪ್ರಾರಂಭಿಸಲಾಗಿದೆ. ಅದಲ್ಲದೆ ಚುನಾವಣಾ ವೆಚ್ಚ ವೀಕ್ಷಣಾ ತಂಡ, ಕಂಪ್ಲೇಂಟ್ ಮಾನಿಟರಿಂಗ್ ಸೆಲ್, ಮೀಡಿಯಾ ಸರ್ಟಿಫಿಕೇಷನ್ ಮತ್ತು ಮಾನಿಟರಿಂಗ್ ಕಮಿಟಿ, ಎಂಸಿಸಿ ಸೆಲ್ ಹಾಗೂ ಇತರ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಚೆಕ್‌ಪೋಸ್ಟ್, 49 ಫ್ಲೈಯಿಂಗ್ ಸ್ಕ್ವಾಡ್ಸ್, 24 ಎಸ್.ಎಸ್.ಟಿ ಹಾಗೂ ಇತರ ತಂಡಗಳನ್ನು ನೇಮಕ ಮಾಡಿದ್ದು, ಎಲ್ಲ ತಂಡಗಳು ಸಹ ಈಗಾಗಲೇ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಚುನಾವಣಾ ಸಿದ್ಧತೆಗಳು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ತಂಡಗಳು, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ