ಹಾವೇರಿ: ನಗರದಲ್ಲಿ ಫೆ. 14ರಂದು ನಡೆಯಲಿರುವ ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಸಮಾವೇಶದಲ್ಲಿ 1.20 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಯಾವುದೇ ವ್ಯತ್ಯಯವಾಗದಂತೆ ಅತ್ಯಂತ ವ್ಯವಸ್ಥಿತವಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.
ವಾಹನಗಳ ನಿಲುಗಡೆ, ಊಟದ ಕೌಂಟರ್, ಶೌಚಾಲಯ ಸೌಲಭ್ಯದ ಕುರಿತು ಅಲ್ಲಿಲ್ಲಿ ಸೂಚನಾ ಫಲಕಗಳನ್ನು ಅಳಡಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಫಲಾನುಭವಿಗಳಿಗೆ ವ್ಯವಸ್ಥಿತವಾಗಿ ಹಕ್ಕುಪತ್ರಗಳನ್ನು ವಿತರಣೆ ಮಾಡಲು ನೇಮಕ ಮಾಡಲಾದ ನೋಡಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಫಲಾನುಭವಿಗಳ ವಾಹನ ನಿಲುಗಡೆ, ಆಸನ ವ್ಯವಸ್ಥೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸಮಾವೇಶದ ಕುರಿತು ಕೈಗೊಳ್ಳಲಾದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ಬ್ಯಾಡಗಿ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಶಾಸಕ ಯಾಸೀರ ಅಹ್ಮದಖಾನ ಪಠಾಣ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಇದ್ದರು.