ನಿಯಮ ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ಧ ಕ್ರಮ

KannadaprabhaNewsNetwork |  
Published : May 24, 2026, 01:15 AM IST
ಚಿತ್ರದುರ್ಗ ನಾಲ್ಕನೇ ಪುಟದ ಬಾಟಂ   | Kannada Prabha

ಸಾರಾಂಶ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಹಾಗೂ ನೋಟಿಸ್ ನೀಡಿದರೂ ಸ್ಪಂದಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಜೀವನ್ ಮಿನಷ್ (ಜೆಜೆಎಂ) ವಿವಿಧ ಬ್ಯಾಚ್‍ಗಳ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರಿನ ಯೋಜನೆ ನಾಲ್ಕೈದು ವರ್ಷಗಳು ಕಳೆದರೂ ಇನ್ನೂ ಅಂತಿಮ ಹಂತದಲ್ಲೇ ಉಳಿದಿರುವ ಕಾಮಗಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೆಲಸ ನಿರ್ವಹಿಸದ ಗುತ್ತಿಗೆದಾರರಿಗೆ ಕೇವಲ ಟೆಂಡರ್ ನೀಡದಂತೆ ಶಿಫಾರಸು ಮಾಡುವುದಷ್ಟೇ ಅಲ್ಲದೆ, ಕಾನೂನಾತ್ಮಕವಾಗಿ ಕಪ್ಪುಪಟ್ಟಿಗೆ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್‌ಗಳಿಗೆ ಡಾ.ಎಸ್.ಆಕಾಶ್ ನಿರ್ದೇಶನ ನೀಡಿದರು.

ಜೆಜೆಎಂ ಯೋಜನೆಯಡಿ ಕಳೆದ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರತಿಯೊಂದು ಕಾಮಗಾರಿಯ ಸಂಪೂರ್ಣ ವಿವರ ಒಳಗೊಂಡ ವರದಿಯನ್ನು ನೀಡಬೇಕು. ಒಟ್ಟು ಪ್ರಗತಿಯಲ್ಲಿರುವ 560 ಕಾಮಗಾರಿಗಳ ‘ಲೈನ್ ಲಿಸ್ಟ್’ ಸಿದ್ಧಪಡಿಸಿ, ಯಾವ ಕಾರಣಕ್ಕಾಗಿ ಕಾಮಗಾರಿ ವಿಳಂಬವಾಗಿದೆ ಮತ್ತು ಅದನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳೇನು ಎಂಬ ಬಗ್ಗೆ ಸ್ಪಷ್ಟವಾದ ಷರಾ ಬರೆದು ತಕ್ಷಣವೇ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಕಸ ವಿಲೇವಾರಿ, ನೈರ್ಮಲ್ಯ ನಿರ್ವಹಣೆ ಹಾಗೂ ಅವುಗಳ ಸುಸ್ಥಿರತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳು ತಮ್ಮ ಒಟ್ಟು ತೆರಿಗೆ ಸಂಗ್ರಹದ (ನಿಧಿ-1) ನಿರ್ದಿಷ್ಟ ಶೇಕಡಾವಾರು ಹಣವನ್ನು ಕಡ್ಡಾಯವಾಗಿ ನೈರ್ಮಲ್ಯ ಚಟುವಟಿಕೆಗಳಿಗೆ ಬಳಸುವಂತೆ ಶೀಘ್ರದಲ್ಲೇ ಗರಿಷ್ಠ ಮಿತಿ ನಿಗದಿಪಡಿಸಲಾಗುವುದು ಎಂದು ಡಾ.ಎಸ್‌.ಆಕಾಶ್ ತಿಳಿಸಿದರು.

ಕೆಲವು ಜಿಲ್ಲೆಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಘನತ್ಯಾಜ್ಯ ನಿರ್ವಹಣೆ ಯಶಸ್ವಿಯಾಗಿ ಮಾಡಲಾಗುತ್ತಿದೆ. ಅದೇ ಮಾದರಿಯನ್ನು ಚಿತ್ರದುರ್ಗ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲೂ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ನಿಯಮಾವಳಿಗಳ ಪ್ರಕಾರ ಟೆಂಡರ್ ಪ್ರಕ್ರಿಯೆ ನಡೆಸಿ, ಸಮರ್ಥ ಏಜೆನ್ಸಿಗಳಿಗೆ ಜವಾಬ್ದಾರಿ ನೀಡುವ ಮೂಲಕ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮೀ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅಮರನಾಥ್ ಜೈನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಡಿ.ಎಸ್.ಸುಮಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆಗೆ ಬೆಂಕಿ : ಲಕ್ಷಾಂತಕ ರು ನಷ್ಟ
50 ಮಿಲಿಯನ್ ಸಸಿಗಳ ನೆಡುವ ಅಭಿಯಾನ