ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್

KannadaprabhaNewsNetwork |  
Published : Jan 10, 2024, 01:45 AM IST
9ಕೆಎಂಎನ್ ಡಿ11ಮದ್ದೂರು ತಾಪಂ ಕಚೇರಿಯಲ್ಲಿ ಕಂದಾಯ ಇಲಾಖೆ ಶಿರಸ್ತೆದಾರ್, ರೆವೆನ್ಯೂ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರ ಸಭೆ ನಡೆಯಿತು. | Kannada Prabha

ಸಾರಾಂಶ

ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ

ಕನ್ನಡಪ್ರಭ ವಾರ್ತೆ ಮದ್ದೂರು

ಕೇಂದ್ರ ಸ್ಥಾನದಲ್ಲಿ ವಾಸ ಮಾಡದೆ ಕರ್ತವ್ಯ ನಿರ್ವಹಿಸುತ್ತಿರುವ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಅನಿವಾರ್ಯ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ತಾಪಂ ಕಚೇರಿಯಲ್ಲಿ ಕಂದಾಯ ಇಲಾಖೆ ಶಿರಸ್ತೆದಾರ್, ರೆವೆನ್ಯೂ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸ್ಥಾನ ಮದ್ದೂರು ಆದರೂ ಸಹ ಕೆಲವು ಅಧಿಕಾರಿಗಳು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಭಾಗಗಳಿಂದ ಬಂದು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು.

ಅಧಿಕಾರಿಗಳ ಇಂತಹ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂದು ತಾಕೀತು ಮಾಡಿದರು.

ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ರೆವೆನ್ಯೂ ಇನ್ಸ್ ಪೆಕ್ಟರ್ ಗಳು ಹಾಗೂ ಗ್ರಾಮ ಲೆಕ್ಕಿಗರು ತಮ್ಮ ಕರ್ತವ್ಯದ ಅವಧಿಯಲ್ಲಿ ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಕೆಲಸ, ಕಾರ್ಯಗಳಿಗೆ ತಮ್ಮ ಬಳಿ ಬರುವ ರೈತರಿಗೆ ಉಡಾಫೆ ಉತ್ತರ ನೀಡದೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದರು.

ಕೆಲ ಅಧಿಕಾರಿಗಳು ಗ್ರಾಮಗಳಿಗೆ ತೆರಳದ ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ಕಾಲಹರಣ ಮಾಡುತ್ತಿರುವ ಸಂಬಂಧ ಸಾಕಷ್ಟು ದೂರುಗಳು ಬಂದಿವೆ. ಇದರಿಂದ ಸ್ಥಳೀಯರಿಗೆ ಸಮಸ್ಯೆಗಳು ಉಂಟಾಗುತ್ತಿವೆ. ಇಂತಹ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ತಹಸೀಲ್ದಾರ್ ಕೆಎಸ್ ಸೋಮಶೇಖರ್. ಭೂ ದಾಖಲೆಗಳ ಸಹಾಯಕ ನಿರ್ದೇಶಕ ಶ್ರೀನಿವಾಸ ಮೂರ್ತಿ. ದ್ವಿತೀಯ ದರ್ಜೆ ತಹಸೀಲ್ದಾರ್ ಸೋಮಶೇಖರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ