ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಚ್.ಎನ್.ಮೀನಾ ಎಚ್ಚರಿಕೆ । ಬಳ್ಳೇಕಟ್ಟೆಯಲ್ಲಿ ಜಾಗೃತಿ ಕಾರ್ಯಾಗಾರ
ಗ್ರಾಹಕರ ಆಯೋಗವು ನೀಡುವ ಆದೇಶಗಳನ್ನು ಸೇವಾದಾರರು ಮಾನ್ಯ ಮಾಡಿ, ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕು. ಆಯೋಗದ ಆದೇಶಗಳನ್ನು ಪಾಲಿಸದ ಸೇವಾದಾರರ ವಿರುದ್ಧ ಕಠಿಣ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದುದೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎಚ್.ಎನ್.ಮೀನಾ ಹೇಳಿದರು. ಸಮೀಪದ ಬಳ್ಳೇಕಟ್ಟೆಯ ಕುಂಬಾರ ಗುಂಡಯ್ಯ ಮಹಾಸಂಸ್ಥಾನದಲ್ಲಿ ಶುಕ್ರವಾರ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕರ್ನಾಟಕ ಕುಂಬಾರ ಮಹಿಳಾ ಮಹಾಸಭಾದ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ತ್ರೀ-ಶಕ್ತಿ, ಸ್ವ-ಸಹಾಯ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಗ್ರಾಹಕರ ಸಮಸ್ಯೆ ಮತ್ತು ಹಕ್ಕುಗಳ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಹಕರ ಆಯೋಗ ನೀಡಿದ ಆದೇಶವನ್ನು ಸೇವಾದಾರರು ಪಾಲಿಸಬೇಕಾಗುತ್ತದೆ. ಆಯೋಗವು ತೀರ್ಮಾನಿಸಿದ ಪರಿಹಾರ ನೀಡಲು ವಿಫಲವಾದರೆ ಕ್ರಿಮಿನಲ್ ಕೇಸ್ ದಾಖಲಿಸುವುದರೊಂದಿಗೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದರು.1962 ರಲ್ಲಿ ಅಮೇರಿಕಾದ ಅಧ್ಯಕ್ಷ ಜಾನ್ ಎಫ್ ಕೆನಡಿ ಅವರು ಗ್ರಾಹಕರ ಹಿತರಕ್ಷಣಾ ಕಾಯ್ದೆಯನ್ನು ಅಮೆರಿಕದಲ್ಲಿ ಮೊದಲ ಬಾರಿಗೆ ಜಾರಿಗೆ ತಂದರು. ಭಾರತದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸರ್ಕಾರ 1986ರಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿತು. ಇದರ ಮುಖ್ಯ ಉದ್ದೇಶ ಗ್ರಾಹಕರನ್ನು ವಂಚನೆ ಹಾಗೂ ಶೋಷಣೆಯಿಂದ ತಪ್ಪಿಸುವುದಾಗಿದೆ. ಗ್ರಾಹಕರು ₹50 ಲಕ್ಷದ ವರೆಗಿನ ವಂಚನೆ ಹಾಗೂ ಸೇವಾ ನೂನ್ಯತೆ ಪ್ರಕರಣಗಳಿಗೆ ಜಿಲ್ಲಾ ಗ್ರಾಹಕರ ಆಯೋಗ, ₹50 ಲಕ್ಷದಿಂದ ₹ 2 ಕೋಟಿ ವರೆಗೆ ರಾಜ್ಯ ಗ್ರಾಹಕರ ಆಯೋಗ ಹಾಗೂ ₹2 ಕೋಟಿಯಿಂದ 10 ಕೋಟಿ ವರೆಗೆ ರಾಷ್ಟ್ರೀಯ ಗ್ರಾಹಕರ ಆಯೋಗದಲ್ಲಿ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಬಹುದು. ಪ್ರಕರಣದ ದಾಖಲಿಸಿ 3 ತಿಂಗಳ ಒಳಗಾಗಿ ಆಯೋಗ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತೆಲಸಂಗ ಕುಂಬಾರ ಗುಂಡಯ್ಯ ಮಹಾಸಂಸ್ಥಾನದ ಬಸವ ಕುಂಬಾರ ಗುಂಡಯ್ಯ ಸ್ವಾಮಿಗಳು, ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾಸಂಸ್ಥಾನದ ಬಸವಮೂರ್ತಿ ಕುಂಬಾರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯೆ ಬಿ.ಎಚ್.ಯಶೋಧಾ, ಆಹಾರ ನಿರೀಕ್ಷಕಿ ಉಮಾದೇವಿ, ಕರ್ನಾಟಕ ಕುಂಬಾರ ಮಹಿಳಾ ಮಹಾಸಭಾ ಅಧ್ಯಕ್ಷೆ ಎಸ್. ಬೈಲಮ್ಮ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಜಿಲ್ಲಾ ಸಂಯೋಜಕ ತಮಟಕಲ್ಲು ಬಿ. ಹನುಮಂತಪ್ಪ, ಕುಂಬಾರ ಗಂಡಯ್ಯ ಮಹಾಸಂಸ್ಥಾನದ ಮಾಜಿ ಕಾರ್ಯದರ್ಶಿ ಮೃತ್ಯುಂಜಯ ಸೇರಿದಂತೆ ಮತ್ತಿರರು ಇದ್ದರು.