ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ತುರ್ತು ಸಂದರ್ಭದಲ್ಲಿ ಸಹಾಯವಾಗುವಂತೆ ಸಿಎಸ್ಆರ್ ಅನುದಾನದಲ್ಲಿ 33 ಲಕ್ಷ ರು. ವೆಚ್ಚದ ಸುಸಜ್ಜಿತ ತುರ್ತುಚಿಕಿತ್ಸಾ ವಾಹನ ಹಾಗೂ ರಾಷ್ಟೀಯ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನವನ್ನು ಸಾರ್ವಜನಿಕ ಸೇವೆಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿಯೇ ತಾಲೂಕು ಆಸ್ಪತ್ರೆಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆ ಜೊತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ತಂದು ಸುಸಜ್ಜಿತ ಹೆರಿಗೆ ವಾರ್ಡ್, ನವಜಾತ ಶಿಶುಗಳ ತುರ್ತು ಚಿಕಿತ್ಸಾ ವಿಭಾಗ ಹಾಗೂ ಆಧುನಿಕ ಯಂತ್ರೋಪಕರಣದ ಮೂಲಕ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.ಆಧುನಿಕತೆಗೆ ತಕ್ಕಂತೆ ಡಿಜಿಟಲ್ ಎಕ್ಸ್ ರೇ, ಸ್ಕ್ಯಾನಿಂಗ್ ಸೆಂಟರ್ ಆರಂಭಿಸಲಾಗಿದೆ. ಥೈರಾಯ್ದ್, ಸೇರಿದಂತೆ ನೂರಕ್ಕೂ ಹೆಚ್ಚು ರಕ್ತ ಪರೀಕ್ಷೆಗಳನ್ನು ಒಂದೇ ಸೂರಿನಲ್ಲಿ ಮಾಡಲಾಗುತ್ತಿದೆ. ಡಯಾಲಿಸಿಸ್ ಯಂತ್ರಗಳನ್ನು ಹೆಚ್ಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೀಡುವಂತಹ ಆರೋಗ್ಯ ಸೌಲಭ್ಯವನ್ನು ತಾಲೂಕಿನಲ್ಲಿಯೇ ನೀಡಲಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೂರದ ಗ್ರಾಮಗಳಲ್ಲಿರುವ ರೋಗಿಗಳಿಗೆ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಾಲೂಕು ಅಸ್ಪತ್ರೆ ಸೇರಿದಂತೆ ಹೋಬಳಿ ಮಟ್ಟದ ಆಸ್ಪತ್ರೆಗಳಿಗೂ ಸಮರ್ಪಕ ತುರ್ತು ಚಿಕಿತ್ಸಾ ವಾಹನದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.