ಹರಪನಹಳ್ಳಿ: ನಗರದ ಹೊಸಪೇಟೆ ರಸ್ತೆ ಬಳಿ ಇರುವ ಗೋಸಾವಿ ಗುಡ್ಡದ ಮೇಲೆ ನೂತನವಾಗಿ ನಿರ್ಮಿಸಿದ ಕೋರ್ಟ್ ಕಟ್ಟಡವನ್ನು ಹೈಕೋರ್ಟ್ ನ್ಯಾಯಾಧೀಶ ಪ್ರದೀಪ್ ಸಿಂಗ್ ಯರೂರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸುಪರ್ದಿನಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆ ಎಂಜಿನಿಯರ್ಗಳ ಜತೆ ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ನೀವು ನಿಮ್ಮ ಮನೆಯನ್ನು ಇದೇ ರೀತಿ ಕಳಪೆ ಕಟ್ಟಿಸಿಕೊಳ್ಳುತ್ತೀರಾ? ಸರ್ಕಾರದ ಹಣವನ್ನು ಬೇಕಾಬಿಟ್ಟಿ ಬಳಸಿಕೊಂಡು ನ್ಯಾಯಾಲಯದ ಕಟ್ಟಡವನ್ನು ಕಳಪೆ ಮಾಡಿರುತ್ತೀರಿ. ಕೂಡಲೇ ನೂತನ ನ್ಯಾಯಾಲಯದ ಕಟ್ಟಡವನ್ನು ಸರಿಪಡಿಸಬೇಕು. ಇಲ್ಲವಾದರೆ ನಿಮ್ಮ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೋಳ್ಳಲಾಗುವುದು ಎಂದು ಎಚ್ಚರಿಸಿದರು.
ಕೂಡಲೇ ನ್ಯಾಯಾಲಯದ ಕಟ್ಟಡಕ್ಕೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪಾರ್ಕ್ ವ್ಯವಸ್ಥೆ ಮಾಡಬೇಕು. ವಕೀಲರ ಸಂಘದ ನೂತನ ಕಟ್ಟಡ ನಿರ್ಮಾಣವಾಗಬೇಕು. ನ್ಯಾಯಾಲಯದ ಸುತ್ತ ಹದ್ದುಬಸ್ತು ಮಾಡಿ ನ್ಯಾಯಾಲಯದ ಜಾಗದಲ್ಲಿ ಒತ್ತುವರಿಯಾಗಿದ್ದರೆ ಕೂಡಲೇ ತೆರವುಗೋಳಿಸುವ ಕಾರ್ಯಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಜಶೇಖರ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ನೂತನ ನ್ಯಾಯಾಲಯದ ಕಟ್ಟಡವನ್ನು ಸಂಪೂರ್ಣವಾಗಿ ಪೂರ್ಣಗೊಳಿಸದಿದ್ದರೆ ನಿಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹರಪನಹಳ್ಳಿ ತಾಲೂಕಿನಲ್ಲಿ ಅತಿಹೆಚ್ಚು ಪ್ರಕರಣಗಳು ಇರುವುದರಿಂದ ಹೆಚ್ಚುವರಿಯಾಗಿ ಈಗಾಗಲೇ ಅನುಮೋದನೆಯಾಗಿರುವ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಹರಪನಹಳ್ಳಿಗೆ ನೀಡಬೇಕು ಎನ್ನುತ್ತಾರೆ ವಕೀಲರ ಸಂಘದ ಪದಾಧಿಕಾರಿಗಳು.