ಶಾಲಾ ಶುಲ್ಕದ ಕಾರಣ ವರ್ಗಾವಣೆ ಪತ್ರ ನೀಡದಿದ್ದಲ್ಲಿ ಕ್ರಮ: ಡಾ.ತಿಪ್ಪೇಸ್ವಾಮಿ

KannadaprabhaNewsNetwork |  
Published : Feb 18, 2025, 12:32 AM IST
ಡಾ.ಕೆ.ಟಿ ತಿಪ್ಪೇಸ್ವಾಮಿ ಅಧಿಕಾರಿಗಳ ಸಭೆ ನಡೆಸಿದರು. | Kannada Prabha

ಸಾರಾಂಶ

ಆರ್‌ಟಿಇ ಕಾಯ್ದೆ ಪ್ರಕಾರ ಶಾಲಾ ಶುಲ್ಕ ಭರಿಸಿಲ್ಲವೆಂಬ ಕಾರಣಕ್ಕೆ ಮಗುವಿನ ವರ್ಗಾವಣೆ ಪತ್ರ ತಡೆ ಹಿಡಿಯುವಂತಿಲ್ಲ.

ಕಾರವಾರ: ಆರ್‌ಟಿಇ ಕಾಯ್ದೆ ಪ್ರಕಾರ ಶಾಲಾ ಶುಲ್ಕ ಭರಿಸಿಲ್ಲವೆಂಬ ಕಾರಣಕ್ಕೆ ಮಗುವಿನ ವರ್ಗಾವಣೆ ಪತ್ರ ತಡೆ ಹಿಡಿಯುವಂತಿಲ್ಲ. ಒಂದು ವೇಳೆ ತಡೆ ಹಿಡಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಸೋಮವಾರ ನಡೆದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ -2009ರ ಕುರಿತು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಉಸ್ತುವಾರಿ ಅಧಿಕಾರಿಗಳಿಗೆ ಹಾಗೂ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೆ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ಹಾಗೂ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚೆಗೆ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ವರ್ಗಾವಣೆ ಪತ್ರ ನೀಡದೇ ಸತಾಯಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಆಯೋಗಕ್ಕೆ ಬರುತ್ತಿವೆ. ಈ ಬಗ್ಗೆ ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಖಾಸಗಿ ಶಾಲೆಗಳಿಗೆ ಸೂಕ್ತ ನಿರ್ದೇಶನ

ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯಾಧ್ಯಾಪಕರ ಕೊಠಡಿಯಲ್ಲಿ ಆರ್‌ಟಿಇ ಸೆಲ್‌ನ ಸಂಪೂರ್ಣ ಮಾಹಿತಿಯುಳ್ಳ ಫಲಕವನ್ನು ಕಡ್ದಾಯವಾಗಿ ಅಳವಡಿಸಬೇಕು. ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಪಿಟಿಎ ರಚನೆ ಮಾಡಿ, ಪೋಷಕರು ಮತ್ತು ಆಡಳಿತ ಮಂಡಳಿ ಚರ್ಚಿಸಿ ಶುಲ್ಕ ನಿಗದಿಪಡಿಸಬೇಕು. ಈ ಸಂಬಂಧ ಅಗತ್ಯ ದಾಖಲೆಗಳನ್ನು ಇಡಬೇಕು ಎಂದರು.

ಮಕ್ಕಳ ರಕ್ಷಣಾ ನೀತಿ-2016 ಅನುಷ್ಠಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನುಷ್ಠಾನಗೊಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಕಲಿಕೆಯ ಜೊತೆ ಮಕ್ಕಳ ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ನೀತಿ- 2016 ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದರು.

ಶಾಲೆ ಬಿಟ್ಟ ಮಕ್ಕಳಿಗೆ ಕೇವಲ ಮನವೊಲಿಕೆ ಅಥವಾ ನೋಟಿಸ್ ನೀಡಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಸಾಧ್ಯವಿಲ್ಲ. ಮಕ್ಕಳು ಯಾವ ಕಾರಣಕ್ಕೆ ಶಾಲೆ ಬಿಟ್ಟಿದ್ದಾರೆ ಎಂಬದುರ ಕುರಿತು ನಿರ್ದಿಷ್ಟ ಕಾರಣ ಗುರುತಿಸಿ ರಚನಾತ್ಮಕ ಪರಿಹಾರ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ತಾಲೂಕುವಾರು ಪಟ್ಟಿ ತಯಾರಿಸಿ ಪ್ರತಿ 3 ತಿಂಗಳಿಗೊಮ್ಮೆ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸಿ

ಸಂಬಂಧಪಟ್ಟ ಇಲಾಖೆಯಿಂದ ಸಮಸ್ಯೆ ಮತ್ತು ಸೂಕ್ತ ಪರಿಹಾರ ಒದಗಿಸಲು ಪ್ರಯತ್ನಿಸಿದಾಗ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಶಿರಸಿ ಡಿಡಿಪಿಐ ಪಿ.ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ, ಎಲ್ಲ ತಾಲೂಕು ಶಿಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಉಸ್ತುವಾರಿ ಅಧಿಕಾರಿಗಳು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದುಬೈನಲ್ಲಿ ಸಿಲುಕಿದ ಅರಸೀಕೆರೆ ಮತ್ತು ಅಂಗಡಿಹಳ್ಳಿ ಜನರು
ಶ್ರೀ ರೇಣುಕಾಚಾರ್ಯ, ಪಂಚಾಚಾರ್ಯರ ಸ್ಮರಿಸಿದರೆ ಪಾಪ ನಾಶ: ಶಿವಕುಮಾರ ಸ್ವಾಮಿ