ಕನ್ನಡಪ್ರಭ ವಾರ್ತೆ ಹುಕ್ಕೇರಿ
ಸಹಕಾರಿ ತತ್ವದಡಿ ವಿದ್ಯುತ್ ಪೂರೈಸುವ ದೇಶದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಗ್ರಾಮ ಪಂಚಾಯತಿಗಳಿಗೆ ಸರಬರಾಜು ಮಾಡಿರುವ ಬಾಕಿ ಬಿಲ್ ವಸೂಲಾತಿಗೆ ವಿಶೇಷ ಕ್ರಮ ವಹಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಇಲ್ಲಿನ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳು ಸುಮಾರು ₹11 ಕೋಟಿಗಳ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದರಿಂದ ಸಂಘಕ್ಕೆ ಸಾಕಷ್ಟು ಆರ್ಥಿಕ ಹೊರೆಯಾಗಿದ್ದು ಬಾಕಿ ವಿದ್ಯುತ್ ಬಿಲ್ ಸಂಗ್ರಹಕ್ಕೆ ವಿಶೇಷ ಒತ್ತು ನೀಡಲಾಗುವುದು ಎಂದರು.
ಗ್ರಾಮ ಪಂಚಾಯತಿಗಳಲ್ಲಿ ವಿದ್ಯುತ್ ಸಂಬಂಧಿತ ಚಟುವಟಿಕೆಗಳಿಗೆ ವೆಚ್ಚ ಮಾಡಲು ಎಸ್ಕ್ರೋ ಅನುದಾನ ಕಾಯ್ದಿರಿಸಲಾಗಿದೆ. ಈ ಎಸ್ಕ್ರೋ ಅನುದಾನದಿಂದ ಹಲವು ವರ್ಷಗಳಿಂದ ವಿದ್ಯುತ್ ಸಂಘದ ಬಾಕಿ ಬಿಲ್ ಪಾವತಿಗೆ ಕ್ರಮ ವಹಿಸಲಾಗುವುದು. ಇದಕ್ಕಾಗಿ ತಾಪಂ ಇಒ ಹಾಗೂ ಪಿಡಿಒಗಳ ವಿಶೇಷ ಸಭೆ ನಡೆಸಲಾಗುವುದು. ಜೊತೆಗೆ ಗೃಹಬಳಕೆ, ವಾಣಿಜ್ಯ ಉದ್ದೇಶಗಳಿಗೂ ಬಳಕೆಯಾಗಿ ಬಾಕಿ ಉಳಿದ ವಿದ್ಯುತ್ ಬಿಲ್ ಸಂಗ್ರಹಕ್ಕೆ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.ವಿದ್ಯುತ್ ಕಳ್ಳತನ ತಡೆಯಲು ವಿಚಕ್ಷಣಾ ದಳ ರಚಿಸಬೇಕು. ಅಗತ್ಯ ಇರುವ ಕಡೆಗಳಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಬೇಕು. ರೈತರಿಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ತೋಟಪಟ್ಟಿ ಮನೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಅಗತ್ಯ ಯೋಜನೆ ರೂಪಿಸಬೇಕು. ವಿದ್ಯುತ್ ತಂತಿ, ಉಪ ಉತ್ಪನ್ನಗಳನ್ನು ಸ್ಥಳೀಯವಾಗಿಯೇ ಸಿದ್ಧಪಡಿಸಲು ಆದ್ಯತೆ ನೀಡಬೇಕು. ಬೇಡಿಕೆಗೆ ಅನುಗುಣವಾಗಿ ಪರಿವರ್ತಕಗಳನ್ನು ಪೂರೈಸಬೇಕು. ಹಳೆಯ ವಿದ್ಯುತ್ ಕಂಬಗಳನ್ನು ತ್ವರಿತವಾಗಿ ಬದಲಾಯಿಸಬೇಕು ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿದ್ಯುತ್ ಸಂಘವನ್ನು ಮತ್ತಷ್ಟು ಬಲಪಡಿಸಲಾಗುವುದು. ಸಿಬ್ಬಂದಿಗೆ ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಆಯಕಟ್ಟಿನ ಸ್ಥಳಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸುರಕ್ಷಾ ಕ್ರಮಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ಮತ್ತು ಗ್ರಾಹಕರ ವಿಶ್ವಾಸದೊಂದಿಗೆ ಹಲವು ಗ್ರಾಹಕಸ್ನೇಹಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಂಸ್ಥೆಯ ಏಳಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಮೂಲಕ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಲಾಗುವುದು ಎಂದರು.ಅಧ್ಯಕ್ಷ ಜಯಗೌಡ ಪಾಟೀಲ, ಉಪಾಧ್ಯಕ್ಷ ವಿಷ್ಣು ರೇಡೆಕರ, ನಿರ್ದೇಶಕರಾದ ಶಶಿರಾಜ ಪಾಟೀಲ, ರವೀಂದ್ರ ಹಿಡಕಲ್, ಕುನಾಲ ಪಾಟೀಲ, ಬಸಗೌಡ ಮಗೆನ್ನವರ, ರವೀಂದ್ರ ಅಸೂದೆ, ಅಶೋಕ ಚಂದಪ್ಪಗೋಳ, ಜೋಮಲಿಂಗ ಪಟೋಳಿ, ಈರಪ್ಪ ಬಂಜಿರಾಮ, ಸಹಕಾರ ಅಭಿವೃದ್ಧಿ ಅಧಿಕಾರಿ ಶಶಿಕಲಾ ಪಾಟೀಲ, ಸ್ಥಾನಿಕ ಅಭಿಯಂತರ ನೇಮಿನಾಥ ಖೆಮಲಾಪುರೆ, ಡಿ.ಎಸ್.ನಾಯಿಕ ಮತ್ತಿತರರು ಉಪಸ್ಥಿತರಿದ್ದರು.