ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ, ಪರಿಹಾರವನ್ನು 15 ದಿನದೊಳಗಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಿಂದ, ಮಾನವ ಜೀವ ಹಾನಿ, ಪ್ರಾಣಿ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳು, ವಿದ್ಯುತ್ ಸಂಪರ್ಕ, ಕೆರೆ, ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿರುತ್ತವೆ. ಈ ಬಗ್ಗೆ ಪರಿಹಾರ ಕ್ರಮಗಳ ಕುರಿತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಅತಿವೃಷ್ಠಿಯಿಂದ ಆಗಬಹುದಾದ ಅನಾಹುತಗಳನ್ನು ಕಡಿಮೆಗೊಳಿಸಲು ಸೂಚಿಸಿದ್ದೇನೆ ಎಂದು ಸಚಿವರು ಸೂಚಿಸಿದ್ದಾರೆ.
ರಜೆ ಮಂಜೂರು ಮಾಡದಂತೆ ಸೂಚನೆ :ಅತಿವೃಷ್ಠಿ ನಿರ್ವಹಣೆ ಮಾಡುವ ದೃಷ್ಠಿಯಿಂದ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಲು ಹಾಗೂ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಜೆಯನ್ನು ಮಂಜೂರು ಮಾಡದಿ ರಲು ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ಗಳನ್ನು ಕಾರ್ಯಸನ್ನದ್ಧಗೊಳಿಸಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಪರಿಹಾರ ಕ್ರಮಕೈಗೊಳ್ಳಲಾಗವುದು ಎಂದಿದ್ದಾರೆ.
ಅತಿವೃಷ್ಠಿಯಾದ ಪ್ರದೇಶಗಳಗೆ ಸಂಬಂಧಿಸಿದ ಉಪ ವಿಭಾಗಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡತಕ್ಕದ್ದು, ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳನ್ನೊಳಗೊಂಡ ತಂಡವು ಪರಿಸ್ಥಿತಿ ನಿಯಂತ್ರಿಸಲು ಖುದ್ದು ಮೊಕ್ಕಾಂ ಹೂಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ. ಹಾನಿಗೊಳಗಾದ ಎಲ್ಲಾ ಬೆಳೆಗಳ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ಶೀಘ್ರವಾಗಿ ಮುಗಿಸಲು ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಅಧಿಕಾರಿಗಳೊಂದಿಗೆ ಸಭೆ:
ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಬದ್ಧವಾಗಿದ್ದು, ರೈತರೊಂದಿಗೆ ತಾವು ಮತ್ತು ಸರ್ಕಾರ ಸದಾ ಬೆಂಬಲಕ್ಕೆ ಇರುತ್ತದೆ. ಯಾರೂ ಆತಂಕಕ್ಕೆ ಒಳಗಾಗಬಾರದೆಂದು ತಿಳಿಸಿ ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಚರ್ಚಿಸಿ ಪರಾಮರ್ಶನೆ ನಡೆಸಲು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಅಧಿಕಾರಿಗಳೊಂದಿಗೆ ಇದೇ ಸೆ. 30ರಂದು ಸಭೆಯನ್ನು ಆಯೋಜಿಸಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.---ಬದಗಲ್ ಗ್ರಾಮದಲ್ಲಿ ನಾಯಿ ಹಾವಳಿ
ತಡೆಗೆ ಜಿಲ್ಲಾಡಳಿತಕ್ಕೆ ಸೂಚನೆ: ಖಂಡ್ರೆ
ಬೀದರ್ ತಾಲೂಕಿನ ಬದಗಲ್ ಗ್ರಾಮದಲ್ಲಿ ಇತ್ತೀಚೆಗೆ 7 ವರ್ಷದ ಬಾಲಕಿ ಮೇಲೆ ಬೀದಿನಾಯಿ ದಾಳಿ ಮಾಡಿ ಗಂಭೀರ ಗಾಯವನ್ನುಂಟು ಮಾಡಿದ್ದು ಈ ಬಾಲಕಿಗೆ ಜಿಲ್ಲಾಡಳಿತದಿಂದ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸುವದರೊಂದಿಗೆ ಇಂತಹ ಪ್ರಕರಣಗಳು ಮರುಕಳಿಸದಂತೆ ಅಗತ್ಯ ನಿಯಂತ್ರಣ ಕ್ರಮ ಜಾರಿಗೊಳಿಸಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೀದಿ ನಾಯಿಗಳಿಂದ ಸಾರ್ವಜನಿಕರ ಮೇಲೆ ದಾಳಿಯಾಗುತ್ತಿರುವ ಪ್ರಕರಣಗಲು ಪದೇ ಪದೇ ವರದಿಯಾಗುತ್ತಿದ್ದು, ಇತ್ತೀಚಿಗೆ ನ್ಯಾಯಾ ಲಯಗಳು ಕೂಡ ತೀವ್ರ ಕ್ರಮವಹಿಸಲು ನಿರ್ದೇಶನ ನೀಡಿರುವುದನ್ನು ಗಮನಿಸಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.