ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಶಾಲಾ ಕಾಲೇಜುಗಳಲ್ಲಿ ಬಿಇಒ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆ ನಡೆಸಿ ಚರ್ಚಿಸಬೇಕು.
ಕನ್ನಡಪ್ರಭ ವಾರ್ತೆ ಗುಡಿಬಂಡೆ
ಇತ್ತೀಚೆಗೆ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳು, ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಈ ಕೃತ್ಯಗಳನ್ನು ತಡೆಯಲು ಜನಜಾಗೃತಿ ಅಗತ್ಯ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಜನತೆಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಮತ್ತು ಬಾಗೇಪಲ್ಲಿ ಎರಡು ತಾಲೂಕುಗಳು ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಇರುವುದರಿಂದ ಈ ಭಾಗದಲ್ಲಿ ಹೆಚ್ಚಾಗಿ ಬಾಲ್ಯವಿವಾಹ, ಮಕ್ಕಳ ಅಪಹರಣ, ಬಾಲಕಿಯರ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿರುವುದರಿಂದ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಇಲ್ಲಿಯ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಸಭೆ ನಡೆಸಲು ಬಿಇಒಗೆ ಸೂಚನೆ
ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಈ ಬಗ್ಗೆ ಬಾಗೇಪಲ್ಲಿ ಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಸಹ ಕರೆದಿದ್ದೇನೆ ಅವರಿಗೆ ಜೊತೆಯಲ್ಲಿ ಚರ್ಚೆಮಾಡಿ ಏನೇನೂ ಕ್ರಮಗಳನ್ನು ಕೈಕೊಳ್ಖಬೇಕೆಂದು ಸೂಚನೆಗಳನ್ನು ನೀಡುತ್ತೇನೆ. ಇದರ ಜೊತೆಗೆ ಶಾಲಾ ಕಾಲೇಜುಗಳಲ್ಲಿ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆಗಳು ಮಾಡುವಂತೆ ಆಯಾ ತಾಲೂಕಿನ ಬಿಇಒಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಈ ವೇಳೆ ಗುಡಿಬಂಡೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಗಣೇಶ್, ರಾಜ್ಯ ಬಾಲ್ಯ ವಿವಾಹ ವಿರೋಧಿ ವೇದಿಕೆಯ ರಾಜ್ಯ ಸಂಚಾಲಕ ವೆಂಕಟೇಶ್, ಬೆಂಗಳೂರು ಮತ್ತು ಜಿಲ್ಲಾ ಮಕ್ಕಳು ರಕ್ಷಣಾಧಿಕಾರಿ ನೌತಾಜ್ ಬಿ, ಜಿಲ್ಲಾ ಮಕ್ಕಳ ರಕ್ಷಣಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವಿಕ್ಷಣಾಧಿಕಾರಿ ಡಿ.ಕೆ ರಾಮೇಗೌಡ, ಜಿಲ್ಲಾ ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಸದಸ್ಯ ಮತ್ತು ಜೀವಿಕ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ಮಂಜುನಾಥ್, ಜೀವಿಕ ತಾಲ್ಲೂಕು ಸಂಚಾಲಕ ಚನ್ನರಾಯಪ್ಪ ಸೇರಿದಂತೆ ಹಲವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.