ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

KannadaprabhaNewsNetwork |  
Published : Aug 28, 2026, 02:30 AM IST
ಪೋಟೊ26ಕೆಎಸಟಿ1: ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿರುವ ಅಧಿಸೂಚನೆ ಪ್ರತಿ. 26ಕೆಎಸಟಿ1ಎ: ಕನ್ನಡಪ್ರಭದಲ್ಲಿ ಜು.17ರಂದು ಪ್ರಕಟಗೊಂಡಿರುವ ವರದಿ26ಕೆಎಸಟಿ1ಬಿ:ಕನ್ನಡಪ್ರಭ ವರದಿ ಉಲ್ಲೇಖಿಸಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಬರೆದಿರುವ ಪತ್ರ. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನಲ್ಲಿ 15 ಕಾರ್ಯಕರ್ತೆ ಹಾಗೂ 22 ಸಹಾಯಕಿಯರು ಸೇರಿದಂತೆ ಒಟ್ಟು 37 ಹುದ್ದೆಗಳು ಖಾಲಿ ಇರುವುದನ್ನು ವರದಿಯಲ್ಲಿ ಬೆಳಕಿಗೆ ತರಲಾಗಿತ್ತು.

ಪರಶಿವಮೂರ್ತಿ ಮಾಟಲದಿನ್ನಿ ಕುಷ್ಟಗಿ

ಸಿಬ್ಬಂದಿ ಕೊರತೆಯಿಂದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣೆಗೆ ತೊಂದರೆಯಾಗುತ್ತಿರುವ ಕುರಿತು ಕನ್ನಡಪ್ರಭ ಪ್ರಕಟಿಸಿದ್ದ ವರದಿಗೆ ಸ್ಪಂದನೆ ದೊರೆತಿದೆ.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಹುದ್ದೆ ಭರ್ತಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಿ ಆ. 25ರಂದು ಅಧಿಸೂಚನೆ ಹೊರಡಿಸಿದೆ.

ಕುಷ್ಟಗಿ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆಯಿಂದ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣ, ಪೌಷ್ಟಿಕ ಆಹಾರ ವಿತರಣೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕಾಂಶ, ಆರೋಗ್ಯ ಜಾಗೃತಿ ಸೇರಿದಂತೆ ವಿವಿಧ ಚಟುವಟಿಕೆಗಳ ನಿರ್ವಹಣೆಗೆ ತೊಂದರೆಯಾಗುತ್ತಿರುವ ಕುರಿತು ಕನ್ನಡಪ್ರಭ ಜು.17ರಂದು ಸಿಬ್ಬಂದಿ ಕೊರತೆಯಿಂದ ಸೊರಗಿದ ಅಂಗನವಾಡಿ ಕೇಂದ್ರ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ಕುಷ್ಟಗಿ ತಾಲೂಕಿನಲ್ಲಿ 15 ಕಾರ್ಯಕರ್ತೆ ಹಾಗೂ 22 ಸಹಾಯಕಿಯರು ಸೇರಿದಂತೆ ಒಟ್ಟು 37 ಹುದ್ದೆಗಳು ಖಾಲಿ ಇರುವುದನ್ನು ವರದಿಯಲ್ಲಿ ಬೆಳಕಿಗೆ ತರಲಾಗಿತ್ತು. ಸಿಬ್ಬಂದಿ ಕೊರತೆಯಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಮೇಲೆಯೇ ಹೆಚ್ಚುವರಿ ಜವಾಬ್ದಾರಿ ಬೀಳುತ್ತಿರುವುದನ್ನೂ ವರದಿ ಪ್ರಸ್ತಾಪಿಸಿತ್ತು.

ಸಿಎಂ ವಿಶೇಷ ಕರ್ತವ್ಯಾಧಿಕಾರಿಯಿಂದ ಪತ್ರ:ವರದಿ ಪ್ರಕಟವಾದ ಮರು ದಿನವೇ ಜು.18ರಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಪತ್ರ ಬರೆದಿದ್ದರು. ಇದೀಗ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿರುವುದು ಗಮನಾರ್ಹವಾಗಿದೆ.

ಜಿಲ್ಲೆಯಲ್ಲಿ 215 ಹುದ್ದೆ: ಇಲಾಖೆಯ ಅಧಿಸೂಚನೆಯಂತೆ ಕೊಪ್ಪಳ ಜಿಲ್ಲೆಯಲ್ಲಿ 28 ಅಂಗನವಾಡಿ ಕಾರ್ಯಕರ್ತೆ ಹಾಗೂ 187 ಸಹಾಯಕಿಯರ ಒಟ್ಟು 215 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುಷ್ಟಗಿ ತಾಲೂಕಿನಲ್ಲಿ 3 ಕಾರ್ಯಕರ್ತೆ ಹಾಗೂ 22 ಸಹಾಯಕಿಯರು ಸೇರಿದಂತೆ 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಪೂರ್ಣಗೊಂಡರೆ ಸಿಬ್ಬಂದಿ ಕೊರತೆಯಿಂದ ಬಳಲುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ನಿರಾಳತೆ ದೊರೆಯಲಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪಿಸಲು ಅನುಕೂಲವಾಗಲಿದ್ದು ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರವೇ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡ ಅಂತಾಪುರದಲ್ಲಿ ಮತ್ತೆರಡು ಜಿನ ಶಾಸನಗಳ ಅನ್ವೇಷಣೆ
ಓದುಗರನ್ನು ಗೆಲ್ಲುವಂತಹ ಸಾಹಿತ್ಯ ಸೃಷ್ಟಿಯಾಗಲಿ: ಸತೀಶ ಕುಲಕರ್ಣಿ