ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಚೇರಿಯಲ್ಲಿದ್ದ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿ ಸ್ವೀಕರಿಸಿದ ನಂತರ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ಮತ್ತು ಕೆಲಸ ಕಾರ್ಯಗಳ ವಿಳಂಬದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಈ ವೇಳೆ ತಮ್ಮ ಕೆಲಸ ಕಾರ್ಯಗಳಲ್ಲಿ ಕಾರಣವಿಲ್ಲದೇ ವಿಳಂಬವಾಗುತ್ತಿದೆ. ಇದರಿಂದ ನಾವು ಪ್ರತಿನಿತ್ಯ ಕಚೇರಿಗೆ ಅಲೆಯುವ ಪರಿಸ್ಥಿತಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಹೇಳಿದರು.ಸಾರ್ವಜನಿಕರಿಂದ ದೂರು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ದಾಖಲೆಗಳು ಸರಿಯಾಗಿದ್ದರೆ ಯಾವುದೇ ಸಬೂಬು ಹೇಳದೆ ಕೆಲಸ ಮಾಡಿಕೊಡಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸರ್ಕಾರ ಕೆಆರ್ಐಡಿಎಲ್ ಮೂಲಕ ತಾಲೂಕು ಕಚೇರಿ ನವೀಕರಣಕ್ಕೆ ಮತ್ತು ಪೇಟಿಂಗ್ ಕಾಮಗಾರಿಗೆ ಒಂದು ಕೋಟಿ ಅನುದಾನ ನೀಡಿದೆ. ಈ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮತ್ತು ಅದರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.
ತಹಸೀಲ್ದಾರ್ ಎಸ್. ಸಂತೋಷ್, ಕಂದಾಯ ಇಲಾಖೆ ಶಿರಸ್ತೇದಾರ್ ಮೋಹನ್, ಭೂ ಮಾಪನ ಇಲಾಖೆ ಭಾಸ್ಕರ್, ಸಾರ್ವಜನಿಕರಾದ ಪ್ರಸಾದ್, ಸಿ.ಆರ್.ರಮೇಶ್, ಕನಗನಮರಡಿ ಜಯರಾಮು ಇತರರು ಇದ್ದರು.