ತಮ್ಮ ಭೂಮಿ ರಕ್ಷಣೆ ಗೋಸ್ಕರ ಬಿಡದಿ ರೈತರ ಹೋರಾಟ ನ್ಯಾಯ ಸಮ್ಮತವಾಗಿದೆ. ಮುಖ್ಯಮಂತ್ರಿಗಳು ಪೊಲೀಸರ ಬಲಪ್ರಯೋಗ ಮಾಡಿಸಿ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಅವರು ಪ್ರವೃತ್ತಿಯನ್ನು ಮುಂದುವರಿಸಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
ಕನ್ನಡಪ್ರಭ ವಾರ್ತೆ ಮದ್ದೂರು
ಬಿಡದಿಯ ಕೃಷಿ ಭೂಮಿಯಲ್ಲಿ ಉದ್ದೇಶಿತ ಟೌನ್ ಶಿಪ್ ಯೋಜನೆ ವಿರೋಧಿಸಿ ಅಲ್ಲಿನ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಲು ತೆರಳುತ್ತಿದ್ದ ಕೊಡಗು ಜಿಲ್ಲಾ ರೈತ ಸಂಘದ ಕಾರ್ಯಕರ್ತರನ್ನು ಮಾರ್ಗ ಮಧ್ಯದಲ್ಲಿಯೇ ತಡೆದು ಬಂಧಿಸಿದ ಕ್ರಮ ಖಂಡಿಸಿ ತಾಲೂಕಿನ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ರೈತ ಸಂಘದ ಅಧ್ಯಕ್ಷ ಪ್ರಭುಲಿಂಗ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಬಳಿ ಪ್ರತಿಭಟನೆ ಇಳಿದ ಮುಖಂಡರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೊಡಗು ಜಿಲ್ಲಾ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಡದಿ ಟೌನ್ ಶಿಪ್ ಯೋಜನೆ ಹೆಸರಿನಲ್ಲಿ ಅಲ್ಲಿನ ರೈತರ ಭೂಮಿಯನ್ನು ವಶಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ದಂಧೆ ನಡೆಸಲು ಹುನ್ನಾರ ನಡೆಸಿದ್ದಾರೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಬಿಡದಿ ರೈತರ ಪರ ಪ್ರತಿಭಟನೆ ಮಾಡಲು ತೆರಳುತ್ತಿದ್ದ ಕೊಡಗಿನ ರೈತರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.
ತಮ್ಮ ಭೂಮಿ ರಕ್ಷಣೆ ಗೋಸ್ಕರ ಬಿಡದಿ ರೈತರ ಹೋರಾಟ ನ್ಯಾಯ ಸಮ್ಮತವಾಗಿದೆ. ಮುಖ್ಯಮಂತ್ರಿಗಳು ಪೊಲೀಸರ ಬಲಪ್ರಯೋಗ ಮಾಡಿಸಿ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಅವರು ಪ್ರವೃತ್ತಿಯನ್ನು ಮುಂದುವರಿಸಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ ಹಾಗೂ ಅಣ್ಣೂರು ಮಹೇಂದ್ರ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ಪಣ್ಣೆದೊಡ್ಡಿ ವೆಂಕಟೇಶ್, ಕೀಳಘಟ್ಟ ಜಗದೀಶ್, ಶೇಖರ್, ಕೆರೆಮೇಗಳ ದೊಡ್ಡಿ ಗಿರೀಶ ಹಾಗೂ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ವಳೆಗೆರೆಹಳ್ಳಿ ರವಿ ಮತ್ತಿತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.