ಹೊನ್ನಾವರ: ಲೋಕಸಭಾ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಉತ್ತಮ ಸಂಘಟನೆ ನಡೆಸುತ್ತಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದರು.
ಬ್ಲಾಕ್ ಹಿಂದುಳಿದ ವರ್ಗದ ವಿಭಾಗದ ಅಧ್ಯಕ್ಷ ಕೆ.ಎಚ್. ಗೌಡ ಮಾತನಾಡಿ, ಪಕ್ಷದ ಗೆಲುವಿಗಾಗಿ ಹೋರಾಡುವುದರಲ್ಲಿ ಎರಡು ಮಾತಿಲ್ಲ. ಆದರೆ ಪ್ರತಿ ಚುನಾವಣೆಯಲ್ಲಿ ನಮ್ಮನ್ನು ಬಳಸಿಕೊಳ್ಳುವ ಪಕ್ಷದ ಮುಖಂಡರು, ಚುನಾವಣೆಯ ಬಳಿಕ ಅವರನ್ನು ದುರ್ಬಿನು ಮೂಲಕ ಹುಡುಕುವ ಪರಿಸ್ಥಿತಿ ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ ಮಾತನಾಡಿ, ಪಕ್ಷದ ಕಾರ್ಯಕರ್ತರೆಂದರೆ ಪಕ್ಷದ ಸಭೆ- ಸಮಾರಂಭಗಳಿಗೆ ಜನರನ್ನು ಕೊಂಡೊಯ್ಯಲೂ ಮಾತ್ರ ಸೀಮಿತವೇ ಎಂದು ಪ್ರಶ್ನಿಸಿದರು.ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಮಹೇಶ್ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪಕ್ಷದ ಕಾರ್ಯಚಟುವಟಿಕೆಯಲ್ಲಿ ಎಂದೂ ಕಾಣದ ಮುಖಗಳು ನಮ್ಮ ನಾಯಕರ ಮುಂದೆ ಗೋಚರಿಸುತ್ತಿರುವುದು ವಿಷಾದನೀಯ ಎಂದರು. ನವಿಲಗೋಣ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಮಾದೇವಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ , ಕಾರ್ಯದರ್ಶಿ ಸುರೇಶ್ ಮೇಸ್ತ, ಇಂಟೆಕ್ ಪ್ರಧಾನ ಕಾರ್ಯದರ್ಶಿ ಕೇಶವ ಮೇಸ್ತ, ಹೊನ್ನಾವರ ನಗರ ಘಟಕದ ಮಾಜಿ ಅಧ್ಯಕ್ಷ ಸುರೇಶ ರುಕ್ಕು ಮೇಸ್ತ, ಜಿಲ್ಲಾ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ ಇತರರು ಮುಖಂಡರು ತಮ್ಮ ತೀವ್ರ ಅಸಮಾದಾನವನ್ನು ಹೊರಹಾಕಿದರು.
ವೇದಿಕೆಯಲ್ಲಿ ಕುಮಟಾ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ಹೊನ್ನಪ್ಪ ನಾಯಕ, ಬ್ಲಾಕ್ ಶಿಕ್ಷಕರ ವಿಭಾಗದ ಅಧ್ಯಕ್ಷ ಪ್ರೊ. ಎಸ್.ಡಿ. ಹೆಗಡೆ, ಸೇವಾದಳದ ಅಧ್ಯಕ್ಷ ಮೋಹನ್ ಆಚಾರಿ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೃಷ್ಣ ಹರಿಜನ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಕ್ರಿಯ್ಯಾ ಶೇಖ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಪಟಗಾರ, ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.