ಶಿರಸಿಯಲ್ಲಿ ಹೆಚ್ಚುವರಿ ಸಖೀ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Aug 09, 2025, 12:01 AM IST
ಜಿಲ್ಲಾಧಿಕಾರಿ ಮಾತನಾಡಿದರು  | Kannada Prabha

ಸಾರಾಂಶ

ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ.

ಕಾರವಾರ: ಶಿರಸಿಯಲ್ಲಿ ಹೆಚ್ಚುವರಿ ಸಖೀ ಕೇಂದ್ರ ತೆರೆಯುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಮಿಷನ್ ಶಕ್ತಿ ಯೋಜನೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಕಾರವಾರ ಕೇಂದ್ರವು ಇತರೆ ತಾಲೂಕುಗಳಿಂದ ದೂರ ಇರುವ ಕಾರಣ ನೊಂದ ಮಹಿಳೆಯರಿಗೆ ತಕ್ಷಣದಲ್ಲಿ ಸೂಕ್ತ ನೆರವು ನೀಡುವ ಉದ್ದೇಶವಿದೆ ಎಂದರು.

ಮಿಷನ್ ಶಕ್ತಿ ಯೋಜನೆಯ ಮಾರ್ಗಸೂಚಿಯನ್ವಯ ಭೌಗೋಳಿಕ ವಿಸ್ತಾರ ಹೊಂದಿರುವ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ದಾಖಲಾಗುವ ಜಿಲ್ಲೆಗಳಲ್ಲಿ ಹೆಚ್ಚುವರಿ ಸಖೀ ಒನ್ ಸ್ಟಾಪ್ ಸೆಂಟರ್ ತೆರೆಯಲು ಅವಕಾಶವಿದ್ದು, ಜಿಲ್ಲೆಯು ಭೌಗೋಳಿಕವಾಗಿ ವಿಸ್ತೀರ್ಣವಾಗಿರುವುದರಿಂದ ಶಿರಸಿಯನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೆಚ್ಚುವರಿ ಸಖೀ ಕೇಂದ್ರ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಪೊಲೀಸ್ ಇಲಾಖೆಯ ಮಾಹಿತಿಯಂತೆ ಜೋಯಿಡಾ, ಹಳಿಯಾಳ, ಮುಂಡಗೋಡ, ಯಲ್ಲಾಪುರ, ಶಿರಸಿ, ಸಿದ್ದಾಪುರ ತಾಲೂಕುಗಳ ಪೊಲೀಸ್ ಠಾಣೆಗಳಲ್ಲಿ 2022 ರಲ್ಲಿ 240, 2023ರಲ್ಲಿ 305, 2024ರಲ್ಲಿ 297 ಸಂಖ್ಯೆಯ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದರು.

ಪೊಕ್ಸೋ ಪ್ರಕರಣಗಳ ನಿಯಂತ್ರಣ ಕುರಿತಂತೆ ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲದೇ ಗ್ರಾಮಮಟ್ಟದಲ್ಲಿ ಆಯೋಜಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಎಲ್ಲ ಗ್ರಾಪಂಗಳಲ್ಲಿನ ಕಾವಲು ಸಮಿತಿಯ ಸದಸ್ಯರಿಗೆ ಮಹಿಳಾ ಮತ್ತು ಮಕ್ಕಳ ಕುರಿತ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಶಿರಸಿಯಲ್ಲಿನ ಸಖಿ ಸದನ ಕೇಂದ್ರದಲ್ಲಿನ ಮಹಿಳೆಯರಿಗೆ ಆರೋಗ್ಯ ಇಲಾಖೆಯ ಮೂಲಕ ಮನಃಶಾಸ್ತ್ರಜ್ಞರಿಂದ ಕೌನ್ಸಲಿಂಗ್ ಆಯೋಜಿಸುವುದರ ಜೊತೆಗೆ ವಕೀಲರಿಂದ ಕಾನೂನು ನೆರವು ಒದಗಿಸಿ , ಜಿಲ್ಲೆಯಲ್ಲಿನ ಸಖಿ ಮತ್ತು ಸ್ವೀಕಾರ ಕೇಂದ್ರಗಳಲ್ಲಿ ಮಹಿಳೆಯರಿಗೆ ನೆರವಾಗುವ ಮಾಹಿತಿ ಒಳಗೊಂಡ ಪುಸ್ತಕಗಳ ಸಂಗ್ರಹಾಲಯ ವ್ಯವಸ್ಥೆ ಮಾಡಿ ಎಂದರು.

ಶಿರಸಿ ಮತ್ತು ಅಂಕೋಲದಲ್ಲಿ ಸಖಿ ನಿವಾಸ ಇದ್ದು, ಕಾರವಾರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಮತ್ತು ಅನುಕೂಲಕರವಾದ ವಸತಿ ಸೌಕರ್ಯ ಒದಗಿಸುವ ಕುರಿತಂತೆ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ತೆರೆಯುವ ಬಗ್ಗೆ ಕ್ರಮ ಕೈಗೊಳ್ಳಿ. ಇದಕ್ಕಾಗಿ ಖಾಸಗಿ ಸಂಸ್ಥೆಗಳು ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಸೂಕ್ತ ವ್ಯವಸ್ಥೆಗಳುಳ್ಳ ಕಟ್ಟಡ ಲಭ್ಯವಿರುವ ಬಗ್ಗೆ ಪರಿಶೀಲಿಸಿ ಎಂದರು.

ಜಿಪಂ ಸಿಇಒ ದಿಲೀಷ್ ಶಶಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿಬಿ ಗೇಟ್‌ ಬದಲಿಸಲು ಹಣ ಕೊಡಿ : ಬಿವೈವಿ
ರಾಯ್‌ ಸಾವಿಗೆ ಐ.ಟಿ. ಕಿರುಕುಳ ಕಾರಣ : ಬಾಬು