ಕನ್ನಡಪ್ರಭ ವಾರ್ತೆ ಬಳ್ಳಾರಿ
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಬಹುಶಿಸ್ತಿಯ ಅಧ್ಯಯನ ಕೇಂದ್ರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ೧೩೪ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನತೆಯ ಕನಸು ನನಸ್ಸಾಗಿಸಬೇಕು ಎಂಬುದು ಅಂಬೇಡ್ಕರ್ರವರ ಧ್ಯೇಯವಾಗಿತ್ತು. ಸತ್ಯ ಮಾರ್ಗದಲ್ಲಿ ನಡೆದರೆ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವುದು ಎಂದರು. ನ್ಯಾಯಯುತ ಮತ್ತು ಸಮ ಸಮಾಜದ ಅವರ ದೃಷ್ಟಿಕೋನವನ್ನು ವಾಸ್ತವಗೊಳಿಸಲು ಇಂದು ನಾವೆಲ್ಲ ಶ್ರಮಿಸೋಣ. ಸಮಾನತೆ, ನ್ಯಾಯ, ಶಿಕ್ಷಣ, ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಅವರ ಕೊಡುಗೆಗಳು ಬಹು ಮುಖ್ಯವಾಗಿದೆ ಎಂದು ಹೇಳಿದರು. ಅವರ ಕೆಲಸ ಮತ್ತು ಆದರ್ಶಗಳು ದೇಶದ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಇಂದಿನ ಪ್ರಬಲ ಭಾರತವನ್ನು ರೂಪಿಸುವಲ್ಲಿ ಅಂಬೇಡ್ಕರ್ರವರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಮಾತನಾಡಿ, ಭಾರತದ ಪ್ರಜೆಗಳು ಎಲ್ಲರೂ ಏಕತೆ, ಸಹೋದರತ್ವ ಹೊಂದಬೇಕು. ದೇಶದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಿಸಿದರೆ ಮಾತ್ರ ಉತ್ತಮ ದೇಶವನ್ನು ಕಟ್ಟಲು ಸಾಧ್ಯ. ಉತ್ತಮ ಶಿಕ್ಷಣವು ಎಲ್ಲರಿಗೂ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಶ್ರಮಿಸುತ್ತಿದೆ. ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ವಿ ವ್ಯಕ್ತಿಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿಶ್ವವಿದ್ಯಾಲಯದ ಅವರಣದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭೀಮ ವಂದನೆ ಸಲ್ಲಿಸಿ ಅಲ್ಲಿಂದ ಸಭಾಭವನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮವನ್ನು ಡಾ. ಶಶಿಧರ ಕೆಲ್ಲೂರ್ ನಿರೂಪಿಸಿದರು. ಡಾ. ಸಂತೋಷ ಜಿ.ಕೆ. ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಇದ್ದರು.