ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಬೀಜೋತ್ಸವ ಹಾಗೂ ಪೂರ್ವ ಮುಂಗಾರು ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಬೀಜ ಬಳಕೆ ಮಾಡಿದಲ್ಲಿ ಬೆಳೆ ಸಮೃದ್ಧ ಬೆಳೆದು ರೈತರು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ಇಂದಿನ ಹವಾಮಾನ ವೈಪರೀತ್ಯ ಹಾಗೂ ನೀರಿನ ಕೊರತೆಯ ಪರಿಸ್ಥಿತಿಯಲ್ಲಿ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳನ್ನು ರೈತರು ಅಳವಡಿಸಿಕೊಳ್ಳಬೇಕು. ನೀರಿನ ಸದ್ಬಳಕೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ರೈತರು ದೇಶಿ ಬೀಜಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಬೇಕು. ರೈತರ ಬಳಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ವಿಶಿಷ್ಟ ಲಕ್ಷಣಗಳಿರುವ ದೇಶಿ ಬೀಜಗಳು ಕಂಡುಬಂದಲ್ಲಿ ಅವುಗಳನ್ನು ವಿಶ್ವವಿದ್ಯಾಲಯಕ್ಕೆ ತಿಳಿಸಬೇಕು. ಅಂತಹ ಬೀಜಗಳನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ ಇತರ ರೈತರಿಗೆ ಹಂಚುವ ಕಾರ್ಯವನ್ನು ವಿಶ್ವವಿದ್ಯಾಲಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ವಿಶ್ವವಿದ್ಯಾಲಯ ಬದ್ಧವಾಗಿದೆ. ಸಂಶೋಧನೆಯಿಂದ ಅಭಿವೃದ್ಧಿಪಡಿಸಿದ ಉತ್ತಮ ತಳಿಗಳನ್ನು ವಿಸ್ತರಣಾ ಚಟುವಟಿಕೆಗಳ ಮೂಲಕ ರೈತರಿಗೆ ತಲುಪಿಸುವಲ್ಲಿ ವಿವಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಇಂದಿನ ದಿನಗಳಲ್ಲಿ ಕೃಷಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಕೃಷಿ ಉದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ರೈತರು ಸ್ವಾವಲಂಬಿಗಳಾಗಿ ಸಂತೋಷದಿಂದ ಬದುಕಲು ಕೃಷಿ ಉದ್ಯಮದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ಕೃಷಿ ವಿವಿ ಪ್ರಾಧ್ಯಾಪಕ ಡಾ.ತಿಮ್ಮೇಗೌಡ ಹಾಗೂ ದೇಶಿ ತಳಿಗಳ ಸಂರಕ್ಷಕ ಡಾ.ಕೆ.ಪಿ.ಕೃಷ್ಣಪ್ರಸಾದ್ ರೈತರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ವಿಶೇಷವಾಗಿ 30ಕ್ಕೂ ಅಧಿಕ ಮಳಿಗೆಗಳು ಭಾಗವಹಿಸಿ ರೈತರಿಗೆ ವಿವಿಧ ಕೃಷಿ ತಂತ್ರಜ್ಞಾನಗಳು, ಬೀಜಗಳು ಹಾಗೂ ನವೀನ ಪದ್ಧತಿಗಳ ಕುರಿತು ಮಾಹಿತಿ ನೀಡಿದವು.