ಕನಕದಾಸರ 537 ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿ ಮುಖಂಡರು ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಭದ್ರಾವತಿ
ಸರ್ವ ಜನಾಂಗಕ್ಕೆ ಕನಕದಾಸರು, ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ರವರು ಆದರ್ಶಪ್ರಾಯರಾಗಿದ್ದು, ಈ ಮಹಾನೀಯರ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
ಸೋಮವಾರ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಕುರುಬರ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 537ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಅಸಮಾನತೆ, ಜಾತಿ ತಾರತಮ್ಯ, ಶೋಷಣೆಗಳ ವಿರುದ್ಧ ಹೋರಾಡಿ ಸಮಾಜಕ್ಕೆ ತಮ್ಮದೇ ಆದ ಆದರ್ಶ ಮೌಲ್ಯಗಳನ್ನು ನೀಡಿರುವ ಈ ಮೂರು ಜನ ಮಹನೀಯರನ್ನು ನಾವೆಲ್ಲರೂ ಪ್ರತಿಬಾರಿ ಸ್ಮರಿಸಬೇಕಾಗಿದೆ. ಪ್ರಸ್ತುತ ಕುರುಬರ ಸಮಾಜ ಸದೃಢವಾಗಿ ಬೆಳೆದು ನಿಂತಿದೆ. ಕುರುಬರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಬೃಹತ್ ಶಕ್ತಿಯಾಗಿ ಬೆಳೆದಿದ್ದಾರೆ. ಇಂತಹ ಸಮಾಜಕ್ಕೆ ಶಾಸಕರು ತಮ್ಮ ಸ್ವಂತ ಜಾಗವನ್ನು ನೀಡಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಾಪಕ, ಸಾಹಿತಿ ಅರಳಿಹಳ್ಳಿ ಅಣ್ಣಪ್ಪ ಉಪನ್ಯಾಸ ನೀಡಿ, ಕನಕದಾಸರು 15-16ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಬೀರಪ್ಪನಾಯಕ-ಬಚ್ಚಮ್ಮ ದಂಪತಿ ಪುತ್ರರಾಗಿದ್ದಾರೆ. ಆರಂಭದಲ್ಲಿ ತಿಮ್ಮಪ್ಪನಾಯಕ ಎಂಬ ಹೆಸರಿನಲ್ಲಿ ವಿಜಯನಗರ ಸಾಮ್ರಾಜ್ಯದ ಸೇನೆಯಲ್ಲಿ ಡಂಡಯಕನಾಗಿ ಸೇವೆ ಸಲ್ಲಿಸಿ ಪ್ರಶಂಸೆಗೆ ಪಾತ್ರರಾಗಿದ್ದು, ನಂತರ ಅವರಿಗೆ ಸಿಕ್ಕಿದ ಚಿನ್ನಾಭರಣಗಳಿಂದ ಕನಕನಾಯಕರಾಗಿ ಗುರುತಿಸಿಕೊಂಡಿದ್ದು, ಕೊನೆಯಲ್ಲಿ ಯುದ್ಧದಲ್ಲಿ ಸೋತ ಅವರಿಗೆ ಆಧ್ಯಾತ್ಮಿಕ ಜ್ಞಾನೋದಯವಾಗಿ ಕನಕದಾಸರಾಗಿ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ.
ತಹಸೀಲ್ದಾರ್ ಕೆ.ಆರ್ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ.ಸಂತೋಷ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಸೂಡಾ ಸದಸ್ಯರಾದ ವೈ. ರೇಣುಕಮ್ಮ, ಎಚ್. ರವಿಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಉಮೇಶ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ನಗರಸಭೆ ಆರ್. ಶ್ರೇಯಸ್, ಕುರುಬರ ಸಂಘದ ವಸಂತ್, ಬಿ.ಎಸ್ ಮಂಜುನಾಥ್, ಕೇಶವ, ಮಂಜುನಾಥ್ ಕೊಯ್ಲಿ, ಕುಮಾರ್, ಪ್ರವೀಣ್, ಮಲ್ಲೇಶ್, ಸರಸ್ವತಿ, ರಾಜೇಂದ್ರ, ಉದ್ಯಮಿ ಬಿ.ಕೆ ಜಗನ್ನಾಥ್ ಸೇರಿ ಇತರರಿದ್ದರು.
ಶಿಕ್ಷಕಿಯರಾದ ಎಚ್.ಎಚ್ ಯಾಮಮ್ಮ, ತ್ರಿವೇಣಿ ಮತ್ತು ಕೆ. ಕೋಕಿಲಾ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಪ್ರಶಾಂತ್ ಸಣ್ಣಕ್ಕಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮೊದಲು ಬಿ.ಎಚ್ ರಸ್ತೆ, ಲೋಯರ್ ಹುತ್ತಾದಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕನಕದಾಸರ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.