ಕನ್ನಡಪ್ರಭ ವಾರ್ತೆ ಹೊಸನಗರಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು, ಮಳೆಯಿಲ್ಲದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಿವಮೊಗ್ಗ ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಪಿಡಿಒಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಬರದ ಛಾಯೆ ದಟ್ಟವಾಗಿದೆ. ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾಧಿಕಾರಿಗಳಿಗೆ ತಾಲೂಕಿನ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಸುವಂತೆ ಈಗಾಗಲೇ ಸೂಚಿಸಿದ್ದಾರೆ. ಅದರಂತೆ ನಾವು ವರದಿ ನಿಡಬೇಕಾಗಿದೆ. ನಿಮ್ಮ ಗ್ರಾಮದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಟಾಸ್ಕ್ ಫೋರ್ಸ್ ಸಮಿತಿಯ ಮುಂದೆ ತಂದರೆ ಅನುಕೂಲವಾಗಲಿದೆ. ಇಲ್ಲವಾದರೆ ಕೊನೆಯ ಘಳಿಗೆಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ತೊಂದರೆಗೆ ಗ್ರಾ.ಪಂ. ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
24 ಗಂಟೇಲಿ ವರದಿ ನೀಡಿ:ಅತಿವೃಷ್ಟಿ ಅಥವಾ ಮನೆಗಳ ಮೇಲೆ ಮರ ಬಿದ್ದು ಹಾನಿಯಾದರೆ 24 ಗಂಟೆಯೊಳಗೆ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದರು.
ಹೊಸನಗರ ತಾಲೂಕಿನಲ್ಲಿ ಸಾಕಷ್ಟು ಮಕ್ಕಳು ಶಾಲೆ ಬಿಟ್ಟಿರುವ ವರದಿ ಬಂದಿದ್ದು, ಶಾಲೆ ಬಿಟ್ಟ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಪೋಷಕರನ್ನು ಪ್ರೇರೇಪಿಸಬೇಕು ಎಂದು ಪಿಡಿಒಗಳಿಗೆ ಆದೇಶಿಸಿದರು.
ಹೊಸನಗರ ತಾಲೂಕಿನಲ್ಲಿ 30 ಗ್ರಾ.ಪಂ. ಯಲ್ಲಿ 29 ಮಳೆಮಾಪನಗಳು ಇದ್ದು, ಇವುಗಳು ಸರಿಯಾಗಿದೆಯೇ ಎಂದು ಪರೀಕ್ಷಿಸಿಕೊಂಡು, ಒಂದು ಪಕ್ಷ ಸರಿಯಾಗಿ ಇರದಿದ್ದರೆ ತಕ್ಷಣ ಸರಿಪಡಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.
ಬರಗಾಲದ ಛಾಯೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣ ಅವರು ಗ್ರಾ.ಪಂ. ಅಧಿಕಾರಿಗಳ ಜೊತೆ ಸಭೆ ನಡೆಸಿದರು.