ಕನ್ನಡಪ್ರಭ ವಾರ್ತೆ ತುಮಕೂರು
ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ, ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ, ಮನೆಗಳು, ಗುಡಿಸಲುಗಳು ನೆಲಕಚ್ಚಿವೆ. ಜನ- ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ. ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ ಜಿಲ್ಲಾಡಳಿತ ಕೂಡಲೇ ಬೆಳೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ರೈತ ಸಂಘದ ಆಗ್ರಹವಾಗಿದೆ ಎಂದರು.
ರೈತರು ಹತ್ತಾರು ವರ್ಷಗಳಿಂದ ಸರಕಾರಿ ಭೂಮಿಯನ್ನು ಉಳುಮೆ ಮಾಡುತ್ತಾ ಫಾರಂ ನಂ ೫೦, ೫೩ ಮತ್ತು ೫೭ ಅಡಿಯಲ್ಲಿ ಸರಕಾರಕ್ಕೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೂ ಬಡವರಿಗೆ ಭೂಮಿ ಸಿಕ್ಕಿಲ್ಲ. ಆದರೆ ಉಳ್ಳುವರಿಗೆ ಭೂಮಿ ದೊರೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೇ ಬಗರ್ ಹುಕ್ಕಂ ಸಾಗುವಳಿ ಅರ್ಜಿಗಳನ್ನು ತುರ್ತು ವಿಲೇವರಿ ಮಾಡುವಂತೆ ಸೂಚನೆ ನೀಡಿದ್ದರೂ ತಹಸೀಲ್ದಾರರು ಗಮನಹರಿಸಿದಂತೆ ಕಂಡು ಬರುತ್ತಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಬಗರ್ಹುಕ್ಕಂ ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೂ ಭೂಮಿ ಮಂಜೂರು ಮಾಡಬೇಕೆಂದು ರೈತ ಸಂಘ ಆಗ್ರಹಿಸುತ್ತದೆ ಎಂದು ಗೋವಿಂದರಾಜು ತಿಳಿಸಿದರು.ರೈತರು, ರಾಜಕೀಯ ನಾಯಕರ ವಿರೋಧದ ನಡುವೆಯೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಮುಂದುವರೆಸಲು ಗುತ್ತಿಗೆದಾರರು ಪ್ರಯತ್ನಿಸುತ್ತಿದ್ದು, ಇದು ಸರಕಾರ ಮತ್ತು ರೈತರ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಯಾವುದೇ ಭೂ- ಸ್ವಾಧೀನವಿಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ. ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸಿ, ಜಿಲ್ಲೆಯ ಜನತೆಗೆ ನ್ಯಾಯ ಕೊಡಿಸಬೇಕು.ಎಕ್ಸ್ಪ್ರೆಸ್ ಕೆನಾಲ್ನಿಂದ ಜಿಲ್ಲೆಯ ೪-೫ ತಾಲೂಕುಗಳಿಗೆ ತೀವ್ರ ಅನ್ಯಾಯವಾಗಲಿದೆ. ಹಾಗಾಗಿ ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ, ಜಿಲ್ಲೆಯ ಮುಖಂಡರಾದ ಕಾಳೇಗೌಡ, ಬಸವರಾಜು, ಶಿವಕುಮಾರ್,ಜಗದೀಶ್, ವೆಂಕಟೇಗೌಡ, ಲಕ್ಷ್ಮಣಗೌಡ, ನಾಗರತ್ನಮ್ಮ, ಚಿಕ್ಕಬೋರೇಗೌಡ, ರಹಮತ್ ಸಾಬ್, ಭಾಗ್ಯಮ್ಮ, ಲೋಕೇಶ್, ರವೀಶ್, ಚನ್ನಬಸಣ್ಣ, ಅರೇಹಳ್ಳಿ ಮಂಜುನಾಥ್, ಶಬ್ಬೀರ ಕೊರಟಗೆರೆ, ಕೆಂಚಪ್ಪ, ಚಿರತೆ ಚಿಕ್ಕಣ್ಣ, ತಿಮ್ಮೇಗೌಡ, ಮಹೇಶ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.
ಕುಲಾಂತರಿ ತಳಿ ಬೀಜ ಬಳಕೆಗೆ ರೈತಸಂಘದ ವಿರೋಧ:ಕುಲಾಂತರಿ ಬೀಜದಿಂದ ವಾತಾವರಣದ ಮೇಲಾಗುವ ದುಷ್ಪರಿಣಾಮಗಳ ಕುರಿತು ಪ್ರೊ.ಎಂ.ಎನ್.ನಂಜುಂಡಸ್ವಾಮಿ ಅವರ ಕಾಲದಿಂದ ರೈತ ಸಂಘ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. ಅಲ್ಲದೆ ವಾಮಮಾರ್ಗದಿಂದ ದೇಶಕ್ಕೆ ನುಸುಳಿದ ಬಿಟಿ ಹತ್ತಿಯಿಂದ ಪರಿಸರದ ಮೇಲಾಗಿರುವ ಕೆಟ್ಟ ಪರಿಣಾಮಗಳ ಕುರಿತು ಹಲವಾರು ತಜ್ಞರು ತಮ್ಮ ಅಭಿಪ್ರಾಯ ಮಂಡಿಸಿ, ಕುಲಾಂತರಿ ತಳಿ ಬೀಜಗಳ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದರೂ ಸುಪ್ರಿಂಕೋರ್ಟು ಕುಲಾಂತರಿ ಬೀಜ ನೀತಿಯ ಕುರಿತು ಸಮಿತಿ ರಚಿಸಲು ಎಂ.ಎನ್.ಸಿ. ಕಂಪನಿಗಳಾದ ಮ್ಯಾನ್ಸೆಂಟೋ ಮತ್ತು ಬೇಯರ್ ಕಂಪನಿಗಳ ನೇತೃತ್ವದಲ್ಲಿ ರೈತರು, ಕೃಷಿ ತಜ್ಞರು, ಸಾರ್ವಜನಿಕರನ್ನು ಒಳಗೊಂಡ ಸಮಿತಿಯನ್ನು ೪ ತಿಂಗಳಲ್ಲಿ ರಚಿಸುವಂತೆ ನಿರ್ದೇಶನ ನೀಡಿರುವುದು ಅತ್ಯಂತ ಅಪಾಯಕಾರಿಯಾಗಿದೆ ಎಂದರು.ತಜ್ಞರ ಪ್ರಕಾರ ಒಂದು ವೇಳೆ ಈ ಸಮಿತಿ ಜಾರಿಗೆ ಬಂದರೆ, ಭವಿಷ್ಯದಲ್ಲಿ ಪ್ರತಿ ಮನೆಯಲ್ಲಿಯೂ ಓರ್ವ ಕ್ಯಾನ್ಸರ್ ರೋಗಿಯನ್ನು ಕಾಣಬಹುದಾಗಿದೆ. ಕಳೆದ ಸೆಪ್ಟಂಬರ್ ೨೯ರಿಂದ ಅಕ್ಟೋಬರ್ ೦೨ ರವರೆಗೆ ದೊಡ್ಡ ಹೊಸೂರು ಸತ್ಯಾಗ್ರಹದಲ್ಲಿ ಇದೇ ವಿಚಾರವಾಗಿ ಹಲವಾರು ಆಯಾಮಗಳಲ್ಲಿ ಚರ್ಚೆ ನಡೆಸಲಾಗಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಇದನ್ನು ವಿರೋಧಿಸಬೇಕು. ಕರ್ನಾಟಕ ರಾಜ್ಯ ರೈತ ಸಂಘ ನವೆಂಬರ್ ೦೪ ರಂದು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.