ಜೂ.24ರಂದು ಕೃಷಿ ಸಚಿವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ: ಸಿ.ಡಿ.ಗಂಗಾಧರ್

KannadaprabhaNewsNetwork | Published : Jun 22, 2025 1:18 AM

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೂ.24ರಂದು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಂತರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನಸ್ಪಂದನಾ ಸಭೆ ನಡೆಸಿ ಜನಸಾಮಾನ್ಯರ ಕುಂದುಕೊರತೆ ಆಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೂ.24ರಂದು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಂತರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನಸ್ಪಂದನಾ ಸಭೆ ನಡೆಸಿ ಜನಸಾಮಾನ್ಯರ ಕುಂದುಕೊರತೆ ಆಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ರೈತ ಸಮುದಾಯ ಹಾಗೂ ಶ್ರೀಸಾಮಾನ್ಯರು ಕುಂದುಕೊರತೆಗಳ ಕುರಿತು ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಮನವಿ ಮಾಡಿದರು.

ತಾಲೂಕಿನ ಸಂತೇಬಾಚಹಳ್ಳಿಯಲ್ಲಿ 1.13 ಕೋಟಿ ರು. ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ, ಮಂಚೀಬೀಡು ಗ್ರಾಮದಲ್ಲಿ 10 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೆಪಿಟಿಸಿಎಲ್ ವಿದ್ಯುತ್ ಉಪ ಕೇಂದ್ರ, ಅಕ್ಕಿಹೆಬ್ಬಾಳು ಗ್ರಾಮದಲ್ಲಿ 1.25 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ನೂತನ ಬಸ್ ನಿಲ್ದಾಣ, 60 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಕೃಷಿ ಇಲಾಖೆಗೆ ಸೇರಿದ ರೈತ ಸಂಪರ್ಕ ಕೇಂದ್ರ,75 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ಉದ್ಘಾಟಿಸುವರು ಎಂದರು.

ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 2.40 ಕೋಟಿ ರು. ವೆಚ್ಚದ ಉಪಹಾರ ಗೃಹ ಮತ್ತು ಹೆಚ್ಚುವರಿ ಶೈಕ್ಷಣಿಕ ಕಟ್ಟಡ, 2.40 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡ, ಹಿಂದುಳಿದ ವರ್ಗಗಳ ಇಲಾಖೆಯ ಪಟ್ಟಣದ ಜಯನಗರ ಬಡಾವಣೆಯಲ್ಲಿ ನಿರ್ಮಿಸಿರುವ 3.26 ಕೋಟಿ ರು. ವೆಚ್ಚದ ಮೆಟ್ರಿಕ್ ಅನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಪಟ್ಟಣದ ಜಲಸೂರು ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ 3.26 ಕೋಟಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಜೊತೆಗೂಡಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ನಂತರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನರ ಕುಂದುಕೊರತೆ ಅಹವಾಲು ಅರ್ಜಿ ಸ್ವೀಕರಿಸಲಿದ್ದಾರೆ. ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯ ವಿವಿಧ ಇಲಾಖೆ ಅಧಿಕಾರಿಗಳು ಜನಸ್ಪಂದನಾ ಸಭೆಯಲ್ಲಿ ಭಾಗವಹಿಸುವರು. ತಾಲೂಕಿನಾದ್ಯಂತ ಪ್ರತಿ ಗ್ರಾಪಂ ವ್ಯಾಪ್ತಿ ಕರಪತ್ರಗಳ ಮೂಲಕ ಪ್ರಚಾರ ನಡೆಸಿ ಜನರಿಗೆ ಮಾಹಿತಿ ನೀಡಬೇಕು ಎಂದರು.

ಈ ವೇಳೆ ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ ಕಿಕ್ಕೇರಿ ಸುರೇಶ್, ಕರ್ನಾಟಕ ನಗರಾಭಿವೃದ್ಧಿ ಮತ್ತು ಮೂಲ ಸೌಕರ್ಯ ಹಣಕಾಸು ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್, ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಅಧ್ಯಕ್ಷ ರಾಜಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ಮುಖಂಡರಾದ ಮಡುವಿನಕೋಡಿ ಕಾಂತರಾಜು, ವಿಜಯ ರಾಮೇಗೌಡ ಅಭಿಮಾನಿ ಬಳಗದ ಅಧ್ಯಕ್ಷ ಬಸವರಾಜು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಲ್ಯಾಸ್ ಪಾಷ, ಬೀರವಳ್ಳಿ ಆಕಾಶ್, ಸಚಿವ ಎನ್.ಚಲುವರಾಯಸ್ವಾಮಿ ಅವರ ಆಪ್ತ ಸಹಾಯಕ ಚೇತನ ಮಹೇಶ್ ಮತ್ತಿತರರು ಇದ್ದರು.