ಕಾರ್ಕಳ: ಆಗುಂಬೆ ಘಾಟಿಯಲ್ಲಿ ವಾಹನಗಳ ಒತ್ತಡದಿಂದ ಟ್ರಾಫಿಕ್ ಜಾಮ್, ಕೆಲವು ತಿರುವಿನ ದಂಡೆಗಳ ಕುಸಿತವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಆಗುಂಬೆ ಘಾಟಿಯ ತಿರುವುಗಳ ವೀಕ್ಷಣೆ ನಡೆಸಿದರು. ಇಲ್ಲಿಗೆ ಸಮೀಪದ ಹುಲಿಕಲ್ ಘಾಟಿಯಲ್ಲಿ ವಾಹನ ನಿರ್ಬಂಧವಿರುವುದರಿಂದ ಆಗುಂಬೆ ಘಾಟಿಯಲ್ಲಿ ಅತಿಯಾದ ವಾಹನ ದಟ್ಟಣೆ ಇರುವುದು ಮತ್ತು ನಿರ್ಬಂಧವಿದ್ದರೂ ಜಲ್ಲಿಕಲ್ಲು ಮತ್ತು ಬಾರಿ ತೂಕದ ವಾಹನಗಳ ಸಂಚರಿಸುವುದರಿಂದ ಭೂ ಕುಸಿತ ಸಂಭವವಿದೆ ಎಂದು ಅಧಿಕಾರಿಗಳು ಈ ಸಂದರ್ಭ ವಿವರಿಸಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ಕೋಟ, ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತಾಗಿ ತಿರುವಿನ ದಂಡೆಗಳಲ್ಲಿ ಸಾವಿರ ಮೀಟರ್ ತಡೆಬೇಲಿ ನಿರ್ಮಿಸಲು ಸೂಚಿಸಲಾಗಿದೆ. ತಿರುವುಗಳ ಕುಸಿತ ಮತ್ತು ಘಾಟಿ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರಕ್ಕೆ 15 ಕೋಟಿ ರು. ಕಾಮಗಾರಿಗೆ ಮಂಜೂರಾತಿ ದೊರಕಿದ್ದು, ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಂಸದರೊಂದಿಗೆ ಆಗುಂಬೆ ವನ್ಯಜೀವಿ ವಲಯದ ಅಮಾಸೆಬೈಲು ಅರಣ್ಯಾಧಿಕಾರಿಗಳಾದ ರೂಪೇಶ್ ಚೌವ್ಹಾಣ್, ಸೋಮೇಶ್ವರ ವನ್ಯಜೀವಿ ವಲಯ ಹೆಬ್ರಿ ಅರಣ್ಯಾಧಿಕಾರಿಗಳಾದ ಚಿದಾನಂದಪ್ಪ ಹಾಗೂ ರಾಷ್ಟ್ರೀಯ ಹೆದ್ದಾರಿಯ ಕಾರ್ಯಪಾಲಕ ಅಭಿಯಂತರರಾದ ನವೀನ್ ಮತ್ತು ಸಹಾಯಕ ಶಶಿಧರ್ ಹಾಜರಿದ್ದರು.