ಒಳಮೀಸಲಾತಿ, ಜಾತಿ ಗಣತಿ ಜಾರಿಗೆ ಎಐಬಿಎಸ್ಪಿ ಒತ್ತಾಯ

KannadaprabhaNewsNetwork |  
Published : Oct 27, 2024, 02:03 AM ISTUpdated : Oct 27, 2024, 02:04 AM IST
26ಕೆಆರ್ ಎಂಎನ್ 3.ಜೆಪಿಜಿರಾಮನಗರದ ಸ್ಪೂರ್ತಿ ಭವನದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹಾಗೂ ಮುಖಂಡರು ಅಂಬೇಡ್ಕರ್ ಹಾಗೂ ಕಾನ್ಶಿರಾಂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. | Kannada Prabha

ಸಾರಾಂಶ

ಕಾಂತರಾಜ್ ಆಯೋಗದ ವರದಿಯನ್ನು ಮುಂದಿನ 15 ದಿನಗಳೊಳಗೆ ಜಾರಿ ಮಾಡದಿದ್ದರೆ, ಎಲ್ಲಾ ಸಚಿವರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಘೇರಾವ್ ಮಾಡುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

-ಸಚಿವರಿಗೆ ಘೇರಾವ್‌ -ಎಐಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹ -15 ದಿನದಲ್ಲಿ ಜಾರಿ ಮಾಡದಿದ್ದರೆ ಹೋರಾಟಕನ್ನಡಪ್ರಭ ವಾರ್ತೆ ರಾಮನಗರ

ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿ ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡಿರುವ ಕಾಂತರಾಜ್ ಆಯೋಗದ ವರದಿಯನ್ನು ಮುಂದಿನ 15 ದಿನಗಳೊಳಗೆ ಜಾರಿ ಮಾಡದಿದ್ದರೆ, ಎಲ್ಲಾ ಸಚಿವರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಘೇರಾವ್ ಮಾಡುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಲು ಕೂಡಲೇ ಕಾರ್ಯೋನ್ಮುಖರಾಗಬೇಕು. ರಾಜ್ಯದಲ್ಲಿ ಸದಾಶಿವ ಆಯೋಗ ಮತ್ತು 2015ರಲ್ಲಿ ಕಾಂತರಾಜು ಆಯೋಗವು ಅತ್ಯಂತ ವೈಜ್ಞಾನಿಕವಾಗಿ ಎಲ್ಲಾ ಜಾರಿಗಳ ದತ್ತಾಂಶ ಸಂಗ್ರಹಿಸಿ ತನ್ನ ವರದಿಯನ್ನು ನೀಡಿದೆ. ಇದನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಈ ವರದಿಯಲ್ಲಿ ಪ್ರತಿಯೊಂದು ಜಾತಿಯ - ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ವಿವರಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವುದೇ ಒತ್ತಡಕ್ಕೂ ಮಣಿಯದೆ, ಕಾಂತರಾಜ ಆಯೋಗದ ಈ ವರದಿಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಜಾತಿ ಗಣತಿ ಮಾಡುವ ಬಗ್ಗೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಭಾಷಣ ಮಾಡುತ್ತಾರೆ. ಆದರೆ, ತಮ್ಮದೇ ಸರ್ಕಾರ ಇರುವ ರಾಜ್ಯದಲ್ಲಿ ಜಾತಿ ಗಣತಿ ವರದಿ ಸಿದ್ದವಾಗಿದ್ದರೂ ಅದನ್ನು ಬಿಡುಗಡೆ ಮಾಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದೊಂದು ಧ್ವಂದ್ವ ನಿಲುವು ಎಂದು ಟೀಕಿಸಿದರು.

ಸಂವಿಧಾನ ಉಳಿಸಿ ದೇಶ ರಕ್ಷಿಸಿ ಎನ್ನುವ ಘೋಷಣೆ ಕೂಗುತ್ತಿರುವ ಕಾಂಗ್ರೆಸ್ ಸಂವಿಧಾನ ಬದ್ಧವಾದ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವೀರಶೈವ ಲಿಂಗಾಯತ ಸಂಘ ಕಾಂತರಾಜ ವರದಿ ಜಾರಿ ಮಾಡಬಾರದೆಂದು ಸರ್ಕಾರಕ್ಕೆ ಒತ್ತಾಯ ಮಾಡಲು ನಿರ್ಣಯ ತೆಗೆದುಕೊಂಡಿದೆ. ಅಹಿಂದ ಸಮುದಾಯದ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಸರ್ಕಾರಗಳು ಜಾತಿ ಜನಗಣತಿಯನ್ನು ವಿರೋಧಿಸುತ್ತಿರುವುದು ಅಹಿಂದ ಸಮುದಾಯಕ್ಕೆ ಮಾಡಿದ ದ್ರೋಹವಾಗಿದೆ ಎಂದು ಕುಟುಕಿದರು.

ಇದು ಒಂದೆರಡು ಸಮುದಾಯಗಳು ರಾಜಕೀಯವಾಗಿ ಎಲ್ಲಾ ಸಂಪತ್ತುಗಳನ್ನು ಪಡೆದುಕೊಳ್ಳಬೇಕೆಂಬ ದುರಾಸೆಯಿಂದ ಕೂಡಿದ್ದು, ಇದು ಸಾಮ್ರಾಜ್ಯಶಾಹಿಗಳ ತತ್ವವಾಗಿದೆ. ಕಾಂತರಾಜ ವರದಿ ವಿರೋಧ ಮಾಡುತ್ತಿರುವ ರಾಜಕಾರಣಿಗಳು ಮುಂಬರುವ ಚುನಾವಣೆಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಹೋಗದಂತೆ ಅಹಿಂದ ಸಮುದಾಯ ಒಗ್ಗಟ್ಟಾಗಿ ಸೋಲಿಸಬೇಕು ಎಂದು ಮನವಿ ಮಾಡಿದರು.

ರಾಮನಗರ ಜಿಲ್ಲಾ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಎಐಬಿಎಸ್‌ಪಿ ಜಿಲ್ಲಾ ಸಂಯೋಜಕರಾಗಿ ವಿ.ಸ್ವಾಮಿ, ಮಹದೇವ್ ಬೆಟ್ಟಹಳ್ಳಿ, ಜಿಲ್ಲಾಧ್ಯಕ್ಷರಾಗಿ ವೆಂಕಟಾಚಲ ದೊಡ್ಡ ಆಲಹಳ್ಳಿ, ಜಿಲ್ಲಾ ಉಪಾಧ್ಯಕ್ಷರಾಗಿ ಅಬ್ದುಲ್ ರಹಿಂಬಾಬು, ಬೈರಯ್ಯ ಬಳಗೆರೆ, ಶ್ರೀನಿವಾಸ್ ರಾವ್, ಬಸವರಾಜ್ ಚಿಕ್ಕಾಲಹಳ್ಳಿ ಸೇರಿದಂತೆ ಮಹಿಳಾ ಘಟಕ ಮತ್ತು ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಎಐಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಂದಾನಪ್ಪ, ನಾಗೇಶ್, ಕಾರ್ಯದರ್ಶಿಗಳಾದ ಟಿ.ಸಿ.ಉಮೇಶ್, ಗೌರಮ್ಮ, ಪಾರ್ವತಮ್ಮ, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ