ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಹಾಸನದಲ್ಲಿ ಎಐಡಿಎಸ್‌ಒ ಪ್ರತಿಭಟನೆ

KannadaprabhaNewsNetwork |  
Published : Jun 13, 2024, 12:46 AM IST
12ಎಚ್ಎಸ್ಎನ್16 : ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಸನ ನಗರದ ಹೇಮಾವತಿ ಪ್ರತಿಮೆ ಮುಂದೆ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ನೀಟ್ ಪರೀಕ್ಷೆಯಲ್ಲಿ ನಡೆದ ಭ್ರಷ್ಠಾಚಾರ ವಿರೋಧಿಸಿ ಹಾಗೂ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿದರು.

ಪರೀಕ್ಷೆಯ ಫಲಿತಾಂಶದ ಪಾರದರ್ಶಕತೆಯ ಕುರಿತು ವಿದ್ಯಾರ್ಥಿ, ಪೋಷಕರಿಗೆ ಪ್ರಶ್ನೆ । ಹೆಚ್ಚುವರಿ ಅಂಕ ನೀಡುವಲ್ಲಿ ಪಕ್ಷಪಾತ ಆರೋಪ

ಕನ್ನಡಪ್ರಭ ವಾರ್ತೆ ಹಾಸನ

ನೀಟ್ ಪರೀಕ್ಷೆಯಲ್ಲಿ ನಡೆದ ಭ್ರಷ್ಠಾಚಾರ ವಿರೋಧಿಸಿ ಹಾಗೂ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ವಿಭಾಗದ ಸುಶ್ಮಾ ಮಾಧ್ಯಮದೊಂದಿಗೆ ಮಾತನಾಡಿ, ಜೂನ್ ೪ ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿ ಧೋರಣೆಯಾಗಿದೆ ಎಂದು ದೂರಿದರು.

ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷೆಯ ಪಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ ಎಂದು ಹೇಳಿದರು.

ಈ ಮುನ್ನ ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಐಡಿಎಸ್‌ಒ ಸರ್ಕಾರವನ್ನು ಆಗ್ರಹಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒನ ದನುಶ್ರೀ, ಸೌಮ್ಯ, ಅಭಿಷೇಕ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ