ಸೆ.2ರಿಂದ ಎಐಯುಟಿಯುಸಿ ಅಹೋರಾತ್ರಿ ಧರಣಿ

KannadaprabhaNewsNetwork |  
Published : Aug 31, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಪರಿಷ್ಕೃತ ಕನಿಷ್ಠ ವೇತನ ಜಾರಿ ತಡೆಹಿಡಿದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸೆ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪರಿಷ್ಕೃತ ಕನಿಷ್ಠ ವೇತನ ಜಾರಿ ತಡೆಹಿಡಿದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸೆ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಸುದೀರ್ಘ ಹೋರಾಟದ ಫಲವಾಗಿ ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿಯಲ್ಲಿ ಹಲವು ಸುತ್ತಿನ ಚರ್ಚೆ ಬಳಿಕ ರಾಜ್ಯ ಸರ್ಕಾರ ಮೇ.22 2026ರಂದು 81 ನಿಗದಿತ ಉದ್ಯೋಗಗಳಿಗೆ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ಇದೀಗ ಸರ್ಕಾರವೇ ವೇತನ ಜಾರಿಯನ್ನು ತಡೆಹಿಡಿದು ಸಂಪುಟ ಉಪಸಮಿತಿ ರಚಿಸಿರುವುದು ಕಾರ್ಮಿಕ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು.

ಈ ಪರಿಷ್ಕರಣೆ ಒಂಬತ್ತು ವರ್ಷಗಳ ಬಳಿಕ ನಡೆದಿದ್ದು, ಕೆಲವು ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳು ಪರಿಷ್ಕೃತ ವೇತನದಂತೆ ಒಂದು-ಎರಡು ತಿಂಗಳ ವೇತನವನ್ನೂ ಪಾವತಿಸಿವೆ. ಉದ್ಯಮಪತಿಗಳು ವೇತನ ಹೆಚ್ಚಳ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರೂ, ಇದುವರೆಗೆ ತಡೆಯಾಜ್ಞೆ ದೊರೆತಿಲ್ಲ. ಪ್ರಕರಣ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲಿ ಸರ್ಕಾರ ತನ್ನ ಅಧಿಸೂಚನೆಯನ್ನು ಜಾರಿಗೊಳಿಸುವ ಬದಲು ತಡೆಹಿಡಿದಿರುವುದು ಅಸಮಂಜಸ ಎಂದು ಹೇಳಿದರು.

ಕನಿಷ್ಠ ವೇತನ ಸಲಹಾ ಮಂಡಳಿಯಲ್ಲಿ ಕಾರ್ಮಿಕ, ಉದ್ಯಮ, ಕಾರ್ಮಿಕ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿ ಚರ್ಚಿಸಿದ ಬಳಿಕವೇ ವೇತನ ಪರಿಷ್ಕರಣೆ ಶಿಫಾರಸು ಮಾಡಲಾಗಿತ್ತು. ಹೀಗಾಗಿ, ಈಗ ಮರುಪರಿಶೀಲನೆ ಹೆಸರಿನಲ್ಲಿ ಜಾರಿ ತಡೆಹಿಡಿಯುವ ಅಗತ್ಯವಿಲ್ಲ ಎಂದು ಚಂದ್ರಶೇಖರ ಮೇಟಿ ಹೇಳಿದರು.

ಕಾರ್ಮಿಕರ ವೇತನ ಹೆಚ್ಚಳದಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬೀಳುತ್ತದೆ ಹಾಗೂ ಕೈಗಾರಿಕೆಗಳು ಹೊರರಾಜ್ಯಗಳಿಗೆ ವಲಸೆ ಹೋಗುತ್ತವೆ ಎಂಬ ವಾದ ಸರಿಯಲ್ಲ. ಕೈಗಾರಿಕೆಗಳ ಸ್ಥಳ ಆಯ್ಕೆಯಲ್ಲಿ ಮೂಲಸೌಕರ್ಯ, ವಿದ್ಯುತ್, ಸಾರಿಗೆ, ಮಾರುಕಟ್ಟೆ ಹಾಗೂ ಕೌಶಲ್ಯಪೂರ್ಣ ಕಾರ್ಮಿಕರ ಲಭ್ಯತೆ ಪ್ರಮುಖ ಪಾತ್ರ ವಹಿಸುತ್ತವೆ. ಕಾರ್ಮಿಕರ ಕನಿಷ್ಠ ಹಕ್ಕನ್ನು ಆರ್ಥಿಕ ಹೊರೆಯ ನೆಪದಲ್ಲಿ ತಡೆಹಿಡಿಯುವುದು ಸರಿಯಲ್ಲ ಎಂದರು.

ಮೇ 22ರ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು. ವೇತನ ಜಾರಿ ತಡೆಹಿಡಿಯುವ ಉದ್ದೇಶದಿಂದ ರಚಿಸಿರುವ ಸಚಿವ ಸಂಪುಟ ಉಪಸಮಿತಿಯನ್ನು ರದ್ದುಗೊಳಿಸಬೇಕು. ಕಾರ್ಮಿಕರಿಗೆ ಬಾಕಿ ಇರುವ ವೇತನ ವ್ಯತ್ಯಾಸದ (ಅರಿಯರ್ಸ್) ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಂದ ನೂರಾರು ಕಾರ್ಮಿಕರು ಹಾಗೂ ನೌಕರರು ಸೆ.2ರಿಂದ ನಡೆಯಲಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಪರಿಷ್ಕೃತ ಕನಿಷ್ಠ ವೇತನದ ಸಂಪೂರ್ಣ ಜಾರಿಗಾಗಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿರಂತರ ಹೋರಾಟಕ್ಕೆ ಬಲ ನೀಡಬೇಕು ಎಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗೀತಾ ರಾಯಗೋಳ, ಸುಜಾತಾ ಕಾದಮಠ, ಸುನೀಲ ಜುಂಜವಾಡ್ಕರ್, ಅಮರದಾಸ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೌರಕಾರ್ಮಿಕರಿಗೆ ರಕ್ಷಾ ಬಂಧನ ಕಾರ್ಯಕ್ರಮ
ಹುಕ್ಕೇರಿ ಸಹಕಾರ ಬ್ಯಾಂಕ್‌ಗೆ ₹1.79 ಕೋಟಿ ಲಾಭ