ಮಹಿಳೆ ಉದ್ಯಮಿಯಾಗಲು ಅಕ್ಕ ಕೆಫೆ ಸಹಕಾರಿ: ಸಚಿವ ಡಿ.ಸುಧಾಕರ್

KannadaprabhaNewsNetwork |  
Published : Aug 05, 2025, 12:30 AM IST
ಚಿತ್ರ 2 | Kannada Prabha

ಸಾರಾಂಶ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ಅಕ್ಕ ಕೆಫೆ ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಅಕ್ಕ ಕೆಫೆ ಆರಂಭಿಸುವ ಕುರಿತು ಘೋಷಣೆ ಮಾಡಿದ್ದರು. 2024ರ ಮಾ.8 ರಂದು ರಾಜ್ಯದಲ್ಲಿ ಮೊದಲ ಅಕ್ಕ ಕೆಫೆಗೆ ಚಾಲನೆ ನೀಡಲಾಗಿತ್ತು. ತದ ನಂತರ ರಾಜ್ಯದ ಇತರೆಡೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ನಿರ್ವಹಣೆಯಲ್ಲಿ ಆರಂಭಿಸಿದ ಅಕ್ಕ ಕೆಫೆಗಳು ಯಶಸ್ವಿಯಾಗಿವೆ. ಸಂಪೂರ್ಣವಾಗಿ ಮಹಿಳೆಯರಿಂದಲೇ ಅಕ್ಕ ಕೆಫೆಗಳು ಕಾರ್ಯನಿರ್ವಹಿಸುತ್ತವೆ. ಶುಚಿ ಮತ್ತು ರುಚಿಯಾದ ಆಹಾರವನ್ನು ಸಾರ್ವಜನಿಕರು ಅಕ್ಕ ಕೆಫೆಯಲ್ಲಿ ಸವಿಯಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆಡೆ ಅಕ್ಕ ಕೆಫೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು.

ಈ ವೇಳೆ ಅಕ್ಕ ಕೆಫೆಯಲ್ಲಿ ಉಪ್ಪಿಟ್ಟು, ಸಿರಿಧಾನ್ಯಗಳ ಬಾತ್, ಕಾಫಿ ಸವಿದ ಸಚಿವ ಡಿ.ಸುಧಾಕರ್ ಶುಚಿ ಹಾಗೂ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಕ ಕೆಫೆಯ ಮಹಿಳಾ ಸದಸ್ಯರನ್ನು ಅಭಿನಂದಿಸಿದ ಅವರು ಅಕ್ಕ ಕೆಫೆಯಲ್ಲಿ ಆಹಾರದ ಗುಣಮಟ್ಟ ಚೆನ್ನಾಗಿರಬೇಕು. ಶುಚಿ ಹಾಗೂ ರುಚಿಗೆ ಹೆಚ್ಚಿನ ಆದ್ಯತೆ ನೀಡಿ.ನಿರಂತರವಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

ಜಿಪಂ. ಸಿಇಒ ಡಾ.ಆಕಾಶ್ ಮಾತನಾಡಿ, ಕಡಿಮೆ ಬೆಲೆಯಲ್ಲಿ ಜನರಿಗೆ ಅಕ್ಕ ಕೆಫೆಯಲ್ಲಿ ಮನೆಯ ರುಚಿಯ ಅನುಭೂತಿ ನೀಡುವ ತಿಂಡಿ ಊಟಗಳು ದೊರೆಯಲಿವೆ. ರಾಸಾಯನಿಕ ಬಣ್ಣ, ಕೃತಕ ರುಚಿಕಾರಕಗಳನ್ನು ಅಕ್ಕ ಕೆಫೆಯಲ್ಲಿ ಬಳಸುವುದಿಲ್ಲ. ಶುಚಿ ಮತ್ತು ಆರೋಗ್ಯಕರ ಆಹಾರ ನೀಡುವುದು ಅಕ್ಕ ಕೆಫೆ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು ಪ್ರತಿದಿನವು ಸಿರಿಧಾನ್ಯಗಳ ಖಾದ್ಯ ಅಕ್ಕ ಕೆಫೆಯಲ್ಲಿ ದೊರೆಯುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಪಂ. ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ