ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಸೇರಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟ ಆಶ್ವಾಸನೆಯಂತೆ ಬಿಸಿಯೂಟ ಕಾರ್ಮಿಕರಿಗೆ ₹೭ ಸಾವಿರ ವೇತನ ಹೆಚ್ಚಳ ಆಗಬೇಕು. ಈಗಾಗಲೇ ಕೆಲಸ ಮಾಡುತ್ತಿರುವ ೬ ಗಂಟೆ ಕೆಲಸದ ಅವಧಿಯ ಸುತ್ತೋಲೆ ಹೊರಡಿಸಬೇಕು. ಆರೋಗ್ಯ ವಿಮೆ ಜಾರಿಗೊಳಿಸುವುದು. ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್ಡಿಎಂಸಿಗೆ ವರ್ಗಾವಣೆ ಮಾಡಿರುವ ಕ್ರಮ ವಾಪಸ್ಸಾಗಬೇಕು. ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು ಎಂದು ಒತ್ತಾಯಿಸಿದರು.ಕೆಪಿಎಸ್ ಶಾಲೆ, ಇಸ್ಕಾನ್, ಮಠ, ಇನ್ನಿತರ ಸಂಘ ಸಂಸ್ಥೆಗಳ ಬಿಸಿಯೂಟ ನೌಕರರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಅವರಿಗೆ ಕೆಲಸದ ಭದ್ರತೆ ಒದಗಿಸಬೇಕು. ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು. ಮಾಸಿಕ ಪಿಂಚಣಿ ₹೧೦ ಸಾವಿರ ಕೊಡಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ ಇಡುಗಂಟನ್ನು ತಕ್ಷಣವೇ ಜಾರಿ ಮಾಡಬೇಕು. ಅಡುಗೆ ಕೇಂದ್ರಗಳು ಸುಸಜ್ಜಿತವಾಗಿಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸುವುದು. ಕ್ರಿಮಿಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.
ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ, ಕಾರ್ಯದರ್ಶಿ ಎ.ಬಿ. ಶಶಿಕಲಾ, ಖಜಾಂಚಿ ಭಾಗ್ಯ, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಲಲಿತಾ, ಸಿ.ಕುಮಾರಿ, ಪುಟ್ಟಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.