- ದಾವಣಗೆರೆ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತೆ ಸಭೆ ನಡೆಸಿದ ಸಂತೋಷ್ಕುಮಾರ್
ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ನಗರದ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ನಡೆಯಲಿದೆ. ಈ ಪ್ರಕ್ರಿಯೆ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು.ನಗರದ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತ ಎಣಿಕೆ ಕಾರ್ಯಗಳ ಪೂರ್ವಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೇ 4ರಂದು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದೆ. 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಒಟ್ಟು 14 ಟೇಬಲ್ಗಳನ್ನು ಇರಿಸಲಾಗಿದೆ. ಪೋಸ್ಟಲ್ ಬ್ಯಾಲೆಟ್ ಮತ್ತು ಇಟಿಪಿಬಿಎಸ್ ಗಾಗಿ ಪ್ರತ್ಯೇಕವಾಗಿ ಒಂದು ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆಗಾಗಿ ಕೌಂಟಿಂಗ್ ಸೂಪರ್ವೈಸರ್ ಗಳು, ಅಸಿಸ್ಟೆಂಟ್ಗಳು ಮತ್ತು ಮೈಕ್ರೋ ಅಬ್ಸರ್ವರ್ಗಳನ್ನು ನೇಮಿಸಿ ಅವರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಮತ ಎಣಿಕೆ ಪ್ರಕ್ರಿಯೆಯು ಎಸ್ಒಪಿ, 1961ರ ಚುನಾವಣಾ ನಡಾವಳಿ ನಿಯಮಗಳು ಮತ್ತು 1951ರ ಜನಪ್ರತಿನಿಧಿ ಕಾಯ್ದೆ ಅನ್ವಯ ನಡೆಯಲಿದೆ ಎಂದು ತಿಳಿಸಿದರು.
3 ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಮೊದಲ ಹಂತದಲ್ಲಿ ಮತ ಎಣಿಕೆ ಕೊಠಡಿಯ ಒಳಗಿನ ಭದ್ರತೆಯಾಗಿದೆ. ಇಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಕಾರ್ಯನಿರ್ವಹಿಸುತ್ತದೆ. ಇಲ್ಲಿ ಯಂತ್ರಗಳ ಚಲನವಲನದ ಸಂಪೂರ್ಣ ವೀಡಿಯೋಗ್ರಫಿ ಮತ್ತು ಸಿಸಿಟಿವಿ ಕಣ್ಗಾವಲು ಇರುತ್ತದೆ. ಎರಡನೇ ಹಂತದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಈ ಹಂತದಲ್ಲಿ ಭದ್ರತೆ ಒದಗಿಸುತ್ತದೆ. ಇಲ್ಲಿ ಮೆಟಲ್ ಡಿಟೆಕ್ಟರ್ಗಳ ಮೂಲಕ ತಪಾಸಣೆ ನಡೆಸಲಾಗುತ್ತದೆ. ಮೂರನೇ ಹಂತದಲ್ಲಿ ಇದು ಕೇಂದ್ರದ ಹೊರಭಾಗದ ಭದ್ರತೆಯಾಗಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿರುತ್ತದೆ ಎಂದು ವಿವರಿಸಿದರು.
ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅಧಿಕೃತ ಪಾಸ್ ಇಲ್ಲದ ಯಾರಿಗೂ ಎಣಿಕೆ ಕೇಂದ್ರದ ಒಳಗೆ ಪ್ರವೇಶ ಇರುವುದಿಲ್ಲ. ಬೂತ್ ಕ್ಯಾಪ್ಚರಿಂಗ್ ಅಥವಾ ಎಣಿಕೆ ಕೇಂದ್ರದ ಮೇಲೆ ಅಕ್ರಮ ಪ್ರವೇಶದಂತಹ ಘಟನೆಗಳನ್ನು ತಡೆಯಲು ಮತ್ತು ಚುನಾವಣಾ ಸಾಮಗ್ರಿಗಳನ್ನು ರಕ್ಷಿಸಲು ಗರಿಷ್ಠ ಭದ್ರತೆಯನ್ನು ಮಾಡಲಾಗಿದೆ. ಮತ ಯಂತ್ರಗಳ ಚಲನವಲನ ಹಾಗೂ ಅಧಿಕಾರಿಗಳ (ಆರ್ಒ, ಡಿಒ, ಮೈಕ್ರೋ ಅಬ್ಸರ್ವರ್) ಪ್ರವೇಶಕ್ಕಾಗಿ ಒಂದು ದ್ವಾರ. ಅಭ್ಯರ್ಥಿಗಳು, ಚುನಾವಣಾ ಏಜೆಂಟ್ಗಳು ಮತ್ತು ಮತ ಎಣಿಕೆ ಏಜೆಂಟ್ಗಳಿಗಾಗಿ ಪ್ರತ್ಯೇಕ ದ್ವಾರ ವ್ಯವಸ್ಥೆ ಮಾಡಲಾಗಿದೆ. ಮತ ಕೇಂದ್ರದ ಭದ್ರತೆಗಾಗಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಮತ್ತು ನಿರಂತರ ವಿದ್ಯುತ್ ಸಂಪರ್ಕಕ್ಕಾಗಿ ಬೆಸ್ಕಾಂ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್, ಡಿಡಿಎಲ್ಆರ್ ಭಾಗ್ಯ, ಡಿವೈಎಸ್ಪಿ ಶರಣಬಸವೇಶ್ವರ, ತಹಸೀಲ್ದಾರ್ ಗುರುಬಸವರಾಜ್ ಮತ್ತು ಸಿಆರ್ಪಿಎಫ್ ಇನ್ಸ್ಪೆಕ್ಟರ್ ಮೃತ್ಯುಂಜಯ ಕುಮಾರ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-28ಕೆಡಿವಿಜಿ34: