ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಆರ್ಸಿಬಿ ಮಾರುಕಟ್ಟೆ ವಿಭಾಗದ ನಿಖಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ನಿರ್ದೇಶಕ ಸುನೀಲ್ ಮ್ಯಾಥ್ಯೂ, ಡಿಎನ್ನ ಮ್ಯಾನೇಜರ್ ಕಿರಣ್ ಕುಮಾರ್ ಮತ್ತು ಸಮಂತ್ ಮಾವಿನಕೆರೆ ಅವರು, ತಮ್ಮನ್ನು ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು ಸುದೀರ್ಘವಾಗಿ ವಾದ ಮಂಡಿಸಿದರು. ವಾದ ಪೂರ್ಣಗೊಳಿಸುವ ವೇಳೆ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ಬಹಿರಂಗಪಡಿಸಲಾಗುವುದು. ಎಲ್ಲವನ್ನೂ ಕಪ್ಪು-ಬಿಳುಪಿನ ಮಾದರಿಯಲ್ಲಿ ಪೀಠದ ಮುಂದಿಡಲು ಸಿದ್ಧತೆ ನಡೆಸಬೇಕಿದೆ. ಅರ್ಜಿದಾರರ ಆರೋಪಗಳಿಗೆ ವಿಸ್ತೃತವಾದ ಮಂಡನೆ ಮಾಡಬೇಕಿದೆ. ಇದೇ ಕಾರಣಕ್ಕೆ ಹಂಗಾಮಿ ನ್ಯಾಯಮೂರ್ತಿಗಳ ಮುಂದೆ ಇರುವ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲು ಮನವಿ ಮಾಡಲಾಗಿದೆ. ಹೀಗಾಗಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಬೇಕು ಎಂದು ಕೋರಿದರು.ಅದಕ್ಕೆ ಸಂದೇಶ್ ಚೌಟ, ಅರ್ಜಿದಾರರ ತಕ್ಷಣ ಬಿಡುಗಡೆಗೆ ಆದೇಶಿಸಬೇಕು. ಅರ್ಜಿದಾರರು ಈ ಅರ್ಜಿಯಲ್ಲಿ ಸಫಲವಾಗದಿದ್ದರೆ, ಮತ್ತೆ ಕಸ್ಟಡಿಗೆ ಹೋಗುತ್ತಾರೆ ಎಂದು ಕೋರಿದರು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಅಡ್ವೊಕೇಟ್ ಜನರಲ್, ಅಂತಹ ಮನವಿ ಪರಿಗಣಿಸಲು ಸಾಧ್ಯವಿಲ್ಲ. ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು. ಈ ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಬುಧವಾರ ಬೆಳಗ್ಗೆ 10.30ಕ್ಕೆ ಮುಂದೂಡಿತು.ಇದಕ್ಕೂ ಮುನ್ನ ಸಂದೇಶ್ ಚೌಟ ವಾದಿಸಿ, ಜೂ.5ರಂದು ಬೆಳಗಿನ ಜಾವ ಪ್ರತ್ಯೇಕವಾಗಿ ಸಮಂತ್ ಮಾವಿನಕೆರೆ ನಿಖಿಲ್ ಸೋಸಲೆ ಹಾಗೂ ಸುನೀಲ್ ಮ್ಯಾಥ್ಯೂ ಮತ್ತು ಕಿರಣ್ ಕುಮಾರ್ ಬಂಧಿಸಲಾಗಿದೆ. ಇವರನ್ನು ಬಂಧಿಸಲು ಸಿಸಿಬಿಗೆ ಯಾವ ಅಧಿಕಾರ ಇದೆ? ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡದೆಯೇ ಬಂಧಿಸಿದ್ದು ಹೇಗೆ? ಮುಖ್ಯಮಂತ್ರಿ ಸೂಚನೆ ಆಧರಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.