ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದ ಗ್ರಾಮಸ್ಥರು, ತಾಲೂಕು ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಬಲಾಢ್ಯರಿಗೆ ಮಾಡಿಕೊಟ್ಟಿರುವ ಅಕ್ರಮ ಭೂ ಮಂಜೂರಾತಿ ರದ್ದುಪಡಿಸಬೇಕು. ಇದಕ್ಕೆ ಸಹಕರಿಸಿದ ಕಂದಾಯ ಇಲಾಖೆ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆ.ಎಂ.ಸಂದೇಶ ಮಾತನಾಡಿ, ಗ್ರಾಮದ ಸರ್ವೇ ನಂ.13 ಮತ್ತು ಹೊಸ ಸರ್ವೇ ನಂ.165 ರಲ್ಲಿರುವ ಒಟ್ಟು 95 ಎಕರೆ 13 ಗುಂಟೆ ಗೋಮಾಳ ಭೂಮಿಯನ್ನು ಮಂಡ್ಯ ಮೂಲದ ಡಿ.ರಾಮಲಿಂಗಯ್ಯ ಕುಟುಂಬಸ್ಥರು ಏಕ ಕಾಲದಲ್ಲಿ ಮಂಜೂರು ಮಾಡಿಕೊಂಡಿದ್ದಾರೆ. ಹಣ ಮತ್ತು ರಾಜಕಾರಣಿ ಬಲದಿಂದ ದೌರ್ಜನ್ಯದ ಮೂಲಕ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿದರು.ಈ ಭೂಮಿ ದಲಿತರು ಮತ್ತು ಹಿಂದುಳಿದ ವರ್ಗದ ರೈತರಿಗೆ ಸೇರಬೇಕಾಗಿತ್ತು. ಈ ಗ್ರಾಮವೇ ಇನಾಮ್ ಗ್ರಾಮವಾಗಿದೆ. 95 ಎಕರೆ ಭೂಮಿ ಮಂಜೂರಿನ ಹಿಂದೆ ದೊಡ್ಡ ಸಂಚು ನಡೆದಿದೆ. ಕೂಡಲೇ ತನಿಖೆ ಆಗಬೇಕು. ಭೂಕಬಳಿಕೆ ಮಾಡಿರುವ ಡಿ.ರಾಮಲಿಂಗಯ್ಯ ಪುತ್ರ ವಿವೇಕಾನಂದ ಸರ್ಕಾರಿ ಪೊಲೀಸ್ ಅಧಿಕಾರಿಯಾಗಿದ್ದು, ಅದನ್ನು ಪ್ರಶ್ನಿಸಿ ಹೋರಾಟ ಮಾಡುವ ಗ್ರಾಮದ ಮುಗ್ಧ ಜನರ ಮೇಲೆ ಸುಳ್ಳು ಕೇಸ್ ದಾಖಲಿಸಿ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಗೋಮಳದ ಅಕ್ರಮ ಮಂಜೂರಾತಿ ರದ್ದುಗೊಳಿಸಬೇಕು. ರೈತರ ಮೇಲೆ ಹಾಕಿರುವ ಸುಳ್ಳು ಕೇಸ್ಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ದಲಿತರು ಮತ್ತು ಹಿಂದುಳಿದ ರೈತರ ಮೇಲೆ ದಾಖಲಾಗಿರುವ ಸುಳ್ಳು ಕೇಸ್ ಆರೋಪಗಳ ಬಗ್ಗೆಯೂ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.