ಕನ್ನಡಪ್ರಭ ವಾರ್ತೆ ಹೊನ್ನಾಳಿ
ಓದಿನ ಜತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ನಾನು ಉಪನ್ಯಾಸಕ ಜೀವನದಲ್ಲಿ ಕಂಡು ಕೊಂಡ ವಾಸ್ತವಿಕ ಸತ್ಯ ಎಂದು ಚಿಗುರು ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಹಾಗೂ ಎಚ್. ಕಡದಕಟ್ಟೆ ಶ್ರೀ ವಿಜಯ ಪದವಿಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥ ಎಂ.ಕೆ. ನಾಗರಾಜ್ ಹೇಳಿದರು.ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ, ಪದವಿಪೂರ್ವ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಪ.ಪೂ. ಕಾಲೇಜುಗಳ 2024-25ರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳು ಸೋಲು, ಗೆಲುವುಗಳನ್ನು ಸಮಾನಾಗಿ ಸ್ವೀಕರಿಸುವ, ಆತ್ಮಸ್ಥೈರ್ಯ, ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಆದ್ದರಿಂದ ಜೀವನದಲ್ಲಿ ಕ್ರೀಡೆಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಚ್. ಕಡದಟ್ಟೆಯ ಶ್ರೀ ವಿಜಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ವಸಂತ್ ಮಾತನಾಡಿ, ಈ ಬಾರಿಯ ಪದವಿಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು ನಮ್ಮ ಕಾಲೇಜಿನ ಸಹಯೋಗದಲ್ಲಿ ನಡೆಸಲಾಗುತ್ತಿದೆ. ಹೊನ್ನಾಳಿ ತಾಲೂಕಿನ 9 ಕಾಲೇಜುಗಳಿಂದ 200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾವಹಿಸಿದ್ದಾರೆ. ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೇ ಕ್ರೀಡಾ ಸ್ಫೂರ್ತಿಯಿಂದ ಕ್ರೀಡಾಕೌಶಲ್ಯಗಳನ್ನು ಪ್ರದರ್ಶನ ಮಾಡಬೇಕು ಎಂದು ಹೇಳಿದರು.ಎಚ್. ಕಡದಕಟ್ಟೆ ಗ್ರಾಪಂ ಅಧ್ಯಕ್ಷೆ ಪವಿತ್ರ ಗಣೇಶ್, ಹಿರೇಕಲ್ಮಠದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಉಮಾಕಾಂತ, ದೈಹಿಕ ಶಿಕ್ಷಣ ನಿರ್ದೇಶಕ ನರಸಿಂಹಪ್ಪ, ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ, ಸಾಸ್ವೇಹಳ್ಳಿ ಕೆ.ಪಿ,ಎಸ್. ಶಾಲೆ ಮುಖ್ಯಸ್ಥ ದೇವೀರಪ್ಪ, ಸಾಯಿ ಗುರುಕುಲ ಕಾಲೇಜಿನ ಪ್ರಾಂಶುಪಾಲ ದರ್ಶನ್, ಚಿಗುರು ಎಜುಕೇಷನಲ್ ಟ್ರಸ್ಟ್ ನಿರ್ದೇಶಕ ಎಂ.ಐ.ದೇವರಾಜ್, ನಿರ್ದೇಶಕರು, ದೈಹಿಕ ಶಿಕ್ಷಣ ಶಿಕ್ಷಕರು, ಉಪನ್ಯಾಸಕರು ಇದ್ದರು.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಚಿಗುರು ಸಂಸ್ಥೆ ಕಾರ್ಯದರ್ಶಿ ನಾಗರಾಜ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಕ್ರೀಡಾ ಪುಟುಗಳಿಗೆ ಶುಭ ಹಾರೈಸಿದರು. ಅನಂತರ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.