ಬ್ಯಾಡಗಿ: ರಕ್ತ ಉತ್ಪಾದನೆಗೆ ಯಾವುದೇ ಪರ್ಯಾಯ ಮಾರ್ಗಗಳು ಇಂದಿಗೂ ಸಿಕ್ಕಿಲ್ಲ. ಒಬ್ಬರ ದೇಹದಿಂದ ಇನ್ನೊಬ್ಬರ ದೇಹಕ್ಕೆ ಪೂರೈಕೆ ಅನಿವಾರ್ಯ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ್ ಜೆ. ಹಿರೇಕುಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ, ರಕ್ತದಾನ ಶ್ರೇಷ್ಠ ಅನ್ನುವ ಮಾತಿಗಿಂತ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೊಮ್ಮೆ ಇಷ್ಟು ಪ್ರಮಾಣದಲ್ಲಿ ರಕ್ತದಾನ ಮಾಡಬೇಕು ಎಂದು ಕಡ್ಡಾಯಗೊಳಿಸಿದರೆ ಇನ್ನಷ್ಟು ಸೂಕ್ತ. ಆರೋಗ್ಯವಂತ ಯುವಕರ ಸಂಖ್ಯೆ ಇಳಿಮುಖವಾಗುತ್ತಿದೆ. ಹಾಗಾಗಿ ಇಂತಹ ದಿನಗಳು ಎದುರಾಗುವ ಕಾಲ ದೂರವಿಲ್ಲ ಎಂದರು.
ಅನಾರೋಗ್ಯಕರ ಜೀವನ ಶೈಲಿ ಬಿಡಿ: ಡಾ. ದೀಪ್ತಿ ಮಾತನಾಡಿ, ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಜಗತ್ತಿನಲ್ಲಿ ಯಾವುದು ಇಲ್ಲ. ಆದರೆ ಇದನ್ನು ಮರೆತಿರುವ ಯುವ ಜನತೆ ದುಶ್ಚಟಗಳಿಗೆ ಬಲಿಯಾಗಿ ರಕ್ತದಾನ ಸಹ ಮಾಡದಂತಹ ಸ್ಥಿತಿಗೆ ಬಂದು ತಲುಪುತ್ತಿರುವುದು ನೋವಿನ ಸಂಗತಿ. ಆಹಾರ ಪದ್ಧತಿ, ಅನಾರೋಗ್ಯಕರ ಜೀವನ ಶೈಲಿ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯಿಂದ ಯುವಜನರು ಚಿಕ್ಕ ವಯಸ್ಸಿನಲ್ಲಿಯೇ ಹಲವು ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅವರ ದೇಹದಲ್ಲಿನ ರಕ್ತ ಸಹ ನಿರುಪಯುಕ್ತವಾಗುತ್ತಿದೆ. ಆದ್ದರಿಂದ ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ: ಇದೇ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ವತಿಯಿಂದ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಜರುಗಿತು. ಸಂಘದ ಅಧ್ಯಕ್ಷ ಶಂಕರ ಬಾರ್ಕಿ ಮಾತನಾಡಿ, ದೇಶಕ್ಕೆ ನಾಡಿಗೆ ಅವಶ್ಯವಿರುವ ಅನ್ನ ಮತ್ತು ಶಿಕ್ಷಣ ದಾಸೋಹ ಒದಗಿಸಿದ ಶ್ರೀಗಳ ಸಾಧನೆ ಪ್ರಶಂಸನೀಯ. ನಾಡಿನ ಕೋಟ್ಯಂತರ ಮಕ್ಕಳು ಅವರ ನೆರಳಿನಲ್ಲಿ ಇಂದಿಗೂ ಬದುಕುತ್ತಿರುವುದು ಸಾಕ್ಷಿಯಾಗಿದೆ ಎಂದರು.
ಆರೋಗ್ಯ ಇಲಾಖೆ ಡಿ.ಎನ್. ಚಂದ್ರಶೇಖರ, ಶಶಿಕುಮಾರ ಶಿವಮೊಗ್ಗಿ, ಕಮತದಾರ, ಹಿರಿಯ ನ್ಯಾಯವಾದಿಗಳಾದ ಎಫ್.ಎಂ. ಮುಳಗುಂದ, ಎಂ.ಜೆ. ಮುಲ್ಲಾ, ಪ್ರಭು ಶೀಗಿಹಳ್ಳಿ, ಭಾರತಿ ಕುಲಕರ್ಣಿ, ಪ್ರಕಾಶ ಬನ್ನಿಹಟ್ಟಿ ಉಪಸ್ಥಿತರಿದ್ದರು.