ಮಂಗಳೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ ೧೬ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ಯಲ್ಲಿ ೨,೪೧೬ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ಲಭಿಸಿದೆ. ೬,೧೮೩ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.
ಮೇಳದಲ್ಲಿ ಭಾಗವಹಿಸಿದ್ದ ೩೦೧ ಕಂಪನಿಗಳ ಫಲಿತಾಂಶಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಉಳಿದ ಕಂಪನಿಗಳ ಹಾಗೂ ಅಭ್ಯರ್ಥಿಗಳ ಫಲಿತಾಂಶಗಳನ್ನು ನೇಮಕಾತಿ ಸಂಸ್ಥೆಗಳಿಂದ ಮಾಹಿತಿ ಲಭ್ಯವಾದಂತೆ ಪ್ರಕಟಿಸಲಾಗುವುದು. ಉದ್ಯೋಗ ಮೇಳದಂದು ಸ್ಥಳದಲ್ಲೇ ನೋಂದಣಿ ಮಾಡಿದಂತಹ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಐಟಿಐ ಅಭ್ಯರ್ಥಿಗಳ ನೇಮಕಾತಿ ವಿವರಗಳನ್ನು ಆಳ್ವಾಸ್ ತಂಡದಿಂದ ದೂರವಾಣಿ ಕರೆ ಹಾಗೂ ಎಸ್ಎಂಎಸ್ ಮೂಲಕ ನೇರವಾಗಿ ತಲುಪಿಸಲಾಗುತ್ತದೆ ಎಂದು ಅವರು ತಿಳಿಸಿದರು.ತಾಲೂಕು ಮಟ್ಟದ ಘಟಕಗಳ ಸ್ಥಾಪನೆ:
ಅಭ್ಯರ್ಥಿಗಳಿಗೆ ಗರಿಷ್ಠ ಉದ್ಯೋಗಾವಕಾಶ ದೊರೆಯುವಂತೆ ಮಾಡಲು ವಿವಿಧ ವಲಯಗಳ ಸಂಯೋಜಕರು ನೇಮಕಾತಿ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದು, ನೇಮಕಾತಿಯ ಮುಂದಿನ ಹಂತಗಳ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಿರಂತರ ವಿವಿಧ ಜಿಲ್ಲಾ ಹಾಗೂ ತಾಲೂಕುಗಳಲ್ಲಿ ಅಭ್ಯರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು, ಅವರ ಉದ್ಯೋಗ ಅಗತ್ಯಗಳನ್ನು ಅರ್ಥಮಾಡಿಕೊಂಡು ಸೂಕ್ತ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದ ಘಟಕಗಳನ್ನು ಸ್ಥಾಪಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ ಎಂದು ವಿವೇಕ್ ಆಳ್ವ ತಿಳಿಸಿದರು.ಯಾವ ವಲಯದಲ್ಲಿ ಯಾರಿಗೆಷ್ಟು ಉದ್ಯೋಗ:
ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮಾ ಕ್ಷೇತ್ರದಲ್ಲಿ ೯೧೩ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ಗೊಳಿಸಲಾಗಿದ್ದು, ೨೧೧ ಅಭ್ಯರ್ಥಿಗಳಿಗೆ ಸ್ಥಳದ ಉದ್ಯೋಗ ದೊರಕಿದೆ. ಪ್ರಮುಖ ಬಹುರಾಷ್ಟ್ರೀಯ ಕಂಪೆನಿಯಾದ ಇಎಕ್ಸ್ಎಲ್ ಸರ್ವಿಸಸ್ ಮಾನವ ಸಂಪನ್ಮೂಲ, ಅಕೌಂಟ್ಸ್ ರಿಸೀವಬಲ್ ಮತ್ತು ಅಕೌಂಟ್ಸ್ ಪೇಯಬಲ್ ವಿಭಾಗಗಳಲ್ಲಿ ೩೮ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದೆ. ಔಷಧೀಯ ಕ್ಷೇತ್ರದಲ್ಲಿ ಯೂರೋಫಿನ್ಸ್, ಆರ್.ಎಲ್.ಫಾನನ್ ಕೆಮ್, ಸೋಲಾರಾ ಆಕ್ಟಿವ್ ಫರ್ಮಾ ಸೈನ್ಸಸ್, ಮೆಡಾರ್ಗ್ಯಾನಿಕ್ಸ್ ಇಂಡಿಯಾ, ಸಾಮಿ ನ್ಯೂಟ್ರಾಸ್ಯುಟಿಕಲ್ಸ್, ವಸುಧಾ ಲೈಸೈನ್ಸ್, ಬಯೋಕಾನ್ ಹಾಗೂ ಗ್ರೂಪ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ೧೫೯ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದು, ೪೦ ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ.
ಜಿಬಿಎಂಟಿ ಸೆಕ್ಟರಲ್ ಸ್ಟೀಲ್ ಮ್ಯಾನುಫ್ಯಾಕ್ಚರಿಂಗ್ ಇಂಡಸ್ಟ್ರೀಸ್ ಸಂಸ್ಥೆಯು ಐಟಿಐ, ಡಿಪ್ಲೊಮಾ ಹಾಗೂ ಪದವಿ ಪಡೆದ ೯ ಅಭ್ಯರ್ಥಿಗಳನ್ನು ಯುಎಇಯಲ್ಲಿನ ಉದ್ಯೋಗಾವಕಾಶಗಳಿಗೆ ಆಯ್ಕೆ ಮಾಡಿದೆ. ಎಕ್ಸ್ಪರ್ಟೈಸ್ ಕಾಂಟ್ರಾಕ್ಟಿಂಗ್ ಸಂಸ್ಥೆಯು ೧೧೭ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ, ಸೌದಿ ಅರೇಬಿಯಾ ಹಾಗೂ ಗುಜರಾತ್ನ ಅದಾನಿ ಮುಂದ್ರಾದ ಯೋಜನೆಗಳಿಗೆ ೧೩ ಅಭ್ಯರ್ಥಿಗಳನ್ನು ಸ್ಥಳದ ಆಯ್ಕೆ ಮಾಡಿದೆ. ಗ್ರೋ ಪಿಡಬ್ಲ್ಯುಡಿ ಸಂಸ್ಥೆಯು ಇಬ್ಬರು ವಿಶೇಷ ಚೇತನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅವರು ವಿವರ ನೀಡಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ಪ್ರಗತಿ-೨೦೨೬ ಉತ್ಪಾದನಾ ವಲಯ ಮುಖ್ಯಸ್ಥ ಡಾ. ಕುಮಾರಸ್ವಾಮಿ, ಉದ್ಯೋಗ ನಿಯೋಜನಾ ವಿಭಾಗ ರಂಜಿತಾ ಆಚಾರ್ಯ, ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ದಿಶಾ ಶೆಟ್ಟಿ ಇದ್ದರು.
-ವಿವೇಕ್ ಆಳ್ವ, ವ್ಯವಸ್ಥಾಪಕ ಟ್ರಸ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ