ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ತಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಡಿವಾಳ ಮಾಚಿದೇವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ. ಸಮಾನತೆಗಾಗಿ 12ನೇ ಶತಮಾನದಲ್ಲಿ ಬಸವಾದಿ ಶರಣರು ಸೇರಿದಂತೆ ಹಲವರು ಶ್ರಮಿಸಿದ್ದಾರೆ. ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಶಾಲಾ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ (ಟ್ಯಾಕ್ಸಿ), ಸ್ವಯಂ ಉದ್ಯೋಗ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆಗಳಿದ್ದು, ಇವುಗಳನ್ನು ಬಳಸಿಕೊಂಡು ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಶಾಸಕರು ಸಲಹೆ ನೀಡಿದರು.
ಮಡಿವಾಳ ಮಾಚಿದೇವರ ವೈಚಾರಿಕತೆ, ವೈಜ್ಞಾನಿಕತೆ ಮೆಚ್ಚುವಂತದ್ದು. ಅವರ ವಚನಗಳು ಶ್ರೇಷ್ಠವಾಗಿದ್ದು, ಪ್ರತಿಯೊಂದು ವಚನಗಳು ಅರ್ಥಪೂರ್ಣವಾಗಿವೆ. ಅವರು 12ನೇ ಶತಮಾನದಲ್ಲಿ ವಚನಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ್ದಾರೆ. ಮಡಿವಾಳ ಮಾಚಿದೇವರು ಬಟ್ಟೆ ಶುಚಿಗೊಳಿಸುವ ಮೂಲಕ ಶುದ್ಧವಾಗಿದ್ದರೆ ಜೀವನವೇ ಸಾರ್ಥಕ ಎಂಬುದನ್ನು ಸಾರಿದ್ದಾರೆ ಎಂದರು.
12ನೇ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೊಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವರು ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದು ಬಿ.ಸಿ. ಶಂಕರಯ್ಯ ಪ್ರತಿಪಾದಿಸಿದರು.ಮಡಿವಾಳರ ಅಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಜಿ. ಸುಕುಮಾರ್ ಮಾತನಾಡಿದರು, ಪ್ರಮುಖರಾದ ಮಂಜುನಾಥ್, ತಹಸೀಲ್ದಾರ್ ಶ್ರೀಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.