ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅವರ ವಿಚಾರಧಾರೆ, ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರುವ ಸಂಗತಿ. ಶಿಲ್ಪಕಲೆಗೆ ಮತ್ತೊಂದು ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನಲ್ಲಿ ಹಲವು ದೇವಾಲಯ ನಿರ್ಮಿಸಿದ್ದಾರೆ.
ಕಾರವಾರ:
ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ಇತಿಹಾಸದ ಪುಟ ತೆರೆದು ನೋಡಿದಾಗ ಜಕಣಾಚಾರಿ ಅವರು ಬೇಲೂರು, ಹಳೆಬೀಡಿನಲ್ಲಿ ಕೆತ್ತಿರುವ ಶಿಲ್ಪಕಲೆಯ ಮೂಲಕ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.ಶಿಲ್ಪಕಲೆ ಅತ್ಯಂತ ನಾಜೂಕಾದ ಕೆತ್ತನೆಯ ಕಲೆ. ಇಂತಹ ವಿಶೇವಾದ ಕಲೆಯ ಮೂಲಕ ಜಕಣಾಚಾರಿ ಅವರು ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮುದಾಯದ ಬೇಡಿಕೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಅವುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು. ಸರ್ಕಾರದ ಸೌಲಭ್ಯ ಪಡೆಯಲು ಶಿಕ್ಷಣ ಅತೀ ಮುಖ್ಯ, ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಉಪನ್ಯಾಸ ನೀಡಿದ ಭಾರತೀಯ ವಿಶ್ವಕರ್ಮ ಸೇವಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅವರ ವಿಚಾರಧಾರೆ, ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರುವ ಸಂಗತಿ. ಶಿಲ್ಪಕಲೆಗೆ ಮತ್ತೊಂದು ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನಲ್ಲಿ ಹಲವು ದೇವಾಲಯ ನಿರ್ಮಿಸಿದ್ದಾರೆ ಎಂದು ತಿಳಿಸಿದರು.ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಗೋಪಾಲ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮಾಜ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಂದು ಸಮುದಾಯ ಭವನ, ಮುಂದಿನ ದಿನಗಳಲ್ಲಿ ಜಕಣಾಚಾರಿ ಜಯಂತಿಯನ್ನು ಪ್ರತಿ ತಾಲೂಕಿನಲ್ಲೂ ಆಚರಣೆ, ಸರ್ಕಾರದಿಂದ ಬಂದಂತಹ ಸೌಲಭ್ಯ ಸಮಾಜದ ಜನರಿಗೆ ತಲುಪಿಸಬೇಕು ಎಂದು ಆಗ್ರಹಿಸಿದರು.ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ ಆಚಾರ್ಯ, ಗಂಗಾಧರ ಆಚಾರ್ಯ, ಗಣಪತಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಮಚಂದ್ರ ಕೆ.ಎಂ, ಮುಖಂಡ ಜಗದೀಶ ಆಚಾರ್ಯ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.