ಮಡಿಕೇರಿ : ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ 9ರಂದು ಮೈಸೂರಿನಲ್ಲಿ ನಡೆಯಲಿದೆ.ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10.30ಕ್ಕೆ ಮೈಸೂರಿನ ಮಾಧ್ಯಮ ಮಿತ್ರರು ತೆಗೆದ ಅಭಿಮನ್ಯುವಿನ ವಿವಿಧ ಭಂಗಿಯ ಛಾಯಾಚಿತ್ರಗಳ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಉದ್ಘಾಟಿಸಲಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಖ್ಯಾತ ವನ್ಯಜೀವಿ ತಜ್ಞರಾದ ಕೃಪಾಕರ ಸೇನಾನಿ ಅವರು ಉದ್ಘಾಟಿಸುತ್ತಾರೆ.ಕೃತಿಗಳನ್ನು ವನ್ಯಜೀವಿ ವಿಭಾಗದ ಡಿಸಿಎಫ್ ಡಾ. ಐ.ಬಿ.ಪ್ರಭುಗೌಡ ಹಾಗೂ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಬಿ.ಮಂಜುನಾಥ್ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ನ ಅಧ್ಯಕ್ಷ ಎ.ಪಿ.ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅಭಿಮನ್ಯುವಿನ ಮಾವುತ ವಸಂತ ಅವರನ್ನು ಮೈಸೂರು ಕಲ್ಚರಲ್ ಅಸೋಸಿಯೇಷನ್ನ ಕಾರ್ಯದರ್ಶಿ ಮಹದೇವ್ ಅವರು ಸನ್ಮಾನಿಸಲಿದ್ದಾರೆ. ಕೃತಿಗಳ ಲೇಖಕ ಐತಿಚಂಡ ರಮೇಶ್ ಉತ್ತಪ್ಪ ಉಪಸ್ಥಿತರಿರುವರು.