ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಲೋಪ, ಖಂಡನೆ

KannadaprabhaNewsNetwork | Published : Apr 15, 2024 1:29 AM

ಸಾರಾಂಶ

ಪುರಸಭೆ ಆವರಣದಲ್ಲಿ ಡಾ.ಅಂಬೇಡ್ಕರ್ 133 ನೇ ಜಯಂತಿ ಆಯೋಜಿಸಲಾಗಿತ್ತು. ಜಯಂತಿ ಆಚರಣೆ ಕುರಿತಂತೆ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆ ನಿರ್ಣಯದಂತೆ ತಾಲೂಕ ಕಚೇರಿ ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ಅಂಬೇಡ್ಕರ್ ಪುತ್ಥಳಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಮದ್ದೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ತಾಲೂಕು ಆಡಳಿತದ ಲೋಪ ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಭಾನುವಾರ ವೇದಿಕೆ ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ದಲಿತ ಮುಖಂಡರ ಗುಂಪೊಂದು ಪೋಲಿಸ್ ಠಾಣೆಗೆ ತೆರಳಿ ತಹಸೀಲ್ದಾರ್, ಸಮಾಜ ಕಲ್ಯಾಣ ಹಾಗೂ ಪುರಸಭೆ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ದೂರು ನೀಡಿದ ಘಟನೆಯೂ ಜರುಗಿತು.

ಪಟ್ಟಣದ ಪುರಸಭೆ ಆವರಣದಲ್ಲಿ ಡಾ.ಅಂಬೇಡ್ಕರ್ 133 ನೇ ಜಯಂತಿ ಆಯೋಜಿಸಲಾಗಿತ್ತು. ಜಯಂತಿ ಆಚರಣೆ ಕುರಿತಂತೆ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆ ನಿರ್ಣಯದಂತೆ ತಾಲೂಕ ಕಚೇರಿ ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ಅಂಬೇಡ್ಕರ್ ಪುತ್ಥಳಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.

ಆದರೆ, ಅಧಿಕಾರಿಗಳು ಪೂರ್ವಭಾವಿ ಸಭೆ ನಿರ್ಣಯಕ್ಕೆ ವಿರುದ್ಧವಾಗಿ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಮುಖಂಡರು ಅಂಬೇಡ್ಕರ್ ಪುತ್ಥಳಿ ಸುತ್ತಮುತ್ತ ತಾವೇ ಸ್ವಚ್ಛ ಮಾಡಿಕೊಂಡು ಮಾಲಾರ್ಪಣೆ ಮಾಡಿ ಸ್ಥಳದಲ್ಲೇ ಧರಣಿ ನಡೆಸಿದರು. ತಹಸೀಲ್ದಾರ್ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಂದ ಶಾಸಕ ಕೆ.ಎಂ. ಉದಯ್ ಅವರನ್ನು ದಲಿತ ಮುಖಂಡರು ಸುತ್ತುವರಿದು ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹ ಪಡಿಸಿದರು.

ನಂತರ ಪುರಸಭೆ ಆವರಣದಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಗೆ ನುಗ್ಗಿದ ದಲಿತ ಮುಖಂಡರು ಕೆಲಕಾಲ ಧರಣಿ ನಡೆಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಜಯಂತಿಯಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ. ಹೀಗಾಗಿ ತಹಸೀಲ್ದಾರ್ ಸೋಮಶೇಖರ್, ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ, ಮುಖಂಡರು ಸರ್ಕಲ್ ಇನ್ಸ್ ಪೆಕ್ಟರ್ ಕೆ.ಆರ್. ಪ್ರಸಾದ್ ಅವರಿಗೆ ಲಿಖಿತ ದೂರು ನೀಡಿದರು.

ತರುವಾಯ ವಿಷಯ ತಿಳಿದು ಠಾಣೆಗೆ ದೌಡಾಯಿಸಿದ ತಹಸೀಲ್ದಾರ್ ಸೋಮಶೇಖರ್ ದಲಿತ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಲೋಪದ ಬಗ್ಗೆ ಮುಖಂಡರಲ್ಲಿ ಕ್ಷಮೆಯಾಚನೆ ಮಾಡಿದರು. ತಪ್ಪಿತಸ್ಥ ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಜವಾಬ್ದಾರಿ ಹೊತ್ತಿರುವ ಸಿಬ್ಬಂದಿ ವಿರುದ್ಧ ಈ ಕೂಡಲೇ ಶಿಸ್ತು ಕ್ರಮ ಜರುಗಿಸಿ ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ತಹಸೀಲ್ದಾರ್ ಸೋಮಶೇಖರ್ ಭರವಸೆ ನೀಡಿದ ನಂತರ ದಲಿತ ಮುಖಂಡರು ಪ್ರತಿಭಟನೆ ವಾಪಸ್ ಪಡೆದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ವೆಂಕಟ ಚೆಲುವಯ್ಯ, ಸುರೇಶ್, ಕಾಳಯ್ಯ, ಸಿ.ಎ.ಕೆರೆ ಮೂರ್ತಿ, ಮಹೇಂದ್ರ, ರವಿಕುಮಾರ, ನಂಜುಂಡಯ್ಯ, ಆತ್ಮಾನಂದ, ರಾಮಲಿಂಗಯ್ಯ, ಚೌಡಮ್ಮ, ವನಿತಾ, ಪುಟ್ಟಣ್ಣ, ನಾಗರಾಜ ಮೂರ್ತಿ ಹಾಗೂ ವಿವಿಧ ಗ್ರಾಮಗಳ ದಲಿತ ಮುಖಂಡರು ಪಾಲ್ಗೊಂಡಿದ್ದರು.

Share this article