ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಕೆಜಿಎಫ್
ಶೋಷಿತ ವರ್ಗದವರಿಗೆ ನ್ಯಾಯ ಒದಗಿಸುವ ಮೂಲಕ ತುಳಿತಕ್ಕೊಳಗಾದವರ ಧ್ವನಿಯಾಗಿ ಅಂಬೇಡ್ಕರ್ ಲಿಖಿತ ಸಂವಿಧಾನ ಬರೆಯುವ ಮೂಲಕ ಜನರ ಮನೆ ಮಾತಾಗಿದ್ದಾರೆ ಎಂದು ಶಾಸಕಿ ರೂಪಕಲಾ ಶಶಿಧರ್ ಹೇಳಿದರು.
ನಗರಸಭೆ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ, ಶಿಕ್ಷಣ, ರಕ್ಷಣೆ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿ ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಸಾಧಿಸಲು ಅಗತ್ಯ ಸಂವಿಧಾನ ರಚಿಸಿದ ಕೀರ್ತಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ರಿಗೆ ಸಲ್ಲುತ್ತದೆ ಎಂದರು.
ಕೆಜಿಎಫ್ ಕ್ಷೇತ್ರದಾದ್ಯಂತ ರಸ್ತೆ, ಚರಂಡಿ, ಕುಡಿಯುವ ನೀರು, ಮಿನಿ ವಿಧಾನಸೌಧ, ತಾಪಂ ಕಟ್ಟಡ, ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ತುರ್ತು ಚಿಕಿತ್ಸಾ ಘಟಕ, ನಗರದ ಪ್ರಮುಖ ರಸ್ತೆಗಳನ್ನು ದ್ವಿಪಥ ರಸ್ತೆಗಳನ್ನಾಗಿ ಮಾಡಿದ್ದು, ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವುದಾಗಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ ಎಂದರು.
ನಮ್ಮ ದೇಶವು ಜಾತ್ಯಾತೀತ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದ್ದು, ಇಡೀ ಸಂವಿಧಾನದ ಮುಖ್ಯ ಉದ್ದೇಶ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆ ಒದಗಿಸಿಕೊಡುವುದಾಗಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.